ನವದೆಹಲಿ: ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ಡಿಸೆಂಬರ್ 31ರಂದು ಮಧ್ಯರಾತ್ರಿ ಯುವತಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ರಾಷ್ಟ್ರರಾಜಧಾನಿ ದೆಹಲಿಯಲ್ಲೂ ಅಂತಹದ್ದೆ ಘಟನೆ ನಡೆದಿದ್ದು, ಹೊಸ ವರ್ಷಾಚರಣೆ ದಿನ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ ಪೊಲೀಸರ ಮೇಲೆಯೇ ಕುಡಿದ ಮತ್ತಿನಲ್ಲಿದ್ದ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿದೆ.
31ರಂದು ಮಧ್ಯರಾತ್ರಿ ನಡೆದ ಈ ಘಟನೆಯಲ್ಲಿ ಕನಿಷ್ಠ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಸಹಾಯಕ ಸಬ್ ಇನ್ಸ್ ಪೆಕ್ಟರ್ ಪ್ರಕಾಶ್ ಅವರ ತಲೆಗೆ ಹಾಗೂ ಇತರೆ ಮೂವರು ಪೊಲೀಸ್ ಪೇದೆಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ದೆಹಲಿಯ ಮುಖರ್ಜಿ ನಗರದಲ್ಲಿ ಯುವಕರ ಗುಂಪೊಂದು ಮಹಿಳೆಯೊಬ್ಬರನ್ನು ಬೈಕಿನಿಂದ ಕೆಳಗಿಳಿಸಿ, ಲೈಂಗಿಕ ಕಿರುಕುಳ ನೀಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅದೃಷ್ಟವಶಾತ್ ಯುವತಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ದೆಹಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ, ಶಂಕಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ವಿದ್ಯಾರ್ಥಿಗಳಾಗಿದ್ದು, ಪ್ರವೇಶ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು ಮತ್ತು ದೆಹಲಿಯ ಪಿಜಿಯಲ್ಲಿ ತಂಗಿದ್ದರು ಎನ್ನಲಾಗಿದೆ. ಆದರೆ ಈ ಸಂಬಂಧ ಇದುವರೆಗೂ ಯಾರನ್ನು ಬಂಧಿಸಿಲ್ಲ.
ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಳ್ ಅವರು, ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ.