ಪಣಜಿ: ಗೋವಾ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷ, ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಲ್ವಿಸ್ ಗೋಮ್ಸ್ ಅವರು ಬಂಧನದ ಭೀತಿ ಎದುರಿಸುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದೆ.
ಪ್ರಧಾನಿ ಕಾರ್ಯಾಲಯದ ಸೂಚನೆಯಂತೆ ಮುಖ್ಯಮಂತ್ರಿ ಅಭ್ಯರ್ಥಿ ಎಲ್ವಿಸ್ ಗೋಮ್ಸ್ ಅವರನ್ನು ಯಾವ ಕ್ಷಣದಲ್ಲೂ ಬಂಧಿಸುವ, ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಅಶುತೋಷ್ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷ ಎಲ್ವಿಸ್ ಗೋಮ್ಸ್ ಅವರನ್ನು ಗೋವಾ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಗೋಮ್ಸ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ನಂತರ ಎಫ್ಐಆರ್ ದಾಖಲಿಸಿದ್ದು, ಈಗ ಎಸಿಬಿ ತನಿಖೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಗೋವಾ ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಂಧನದ ಭೀತಿ ಎದುರಿಸುತ್ತಿದ್ದಾರೆ ಎಂದು ಅಶುತೋಷ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಗೋವಾ ಸುಎಂ ಅಭ್ಯರ್ಥಿ ಎಲಿಸ್ ಗೋಮ್ಸ್ ಅವರ ಬಂಧನದ ವಿಚಾರವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹಾಗು ಗೋವಾ ಮುಖ್ಯಮಂತ್ರಿಗಳ ಕೈವಾಡ ಇದ್ದು, ಪ್ರಧಾನಿ ಕಾರ್ಯಾಲಯದ ಸೂಚನೆಯ ಪ್ರಕಾರ ಎಲ್ಲವೂ ನಡೆಯುತ್ತಿದೆ ಎಂದು ಅಶುತೋಶ್ ಆರೋಪಿಸಿದ್ದಾರೆ.