ನವದೆಹಲಿ: ಉತ್ತರ ಪ್ರದೇಶದ ವಿಧಾನಸಭ ಚುನಾವಣೆಯ ಸೀಟು ಹಂಚಿಕೆ ವಿಷಯದಲ್ಲಿ ಸಮಾಜವಾದಿ ಪಕ್ಷ- ಕಾಂಗ್ರೆಸ್ ಪಕ್ಷದ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಕ್ಕಟ್ಟು ನಿವಾರಣೆಯ ಜವಾಬ್ದಾರಿಯನ್ನು ಸೋನಿಯಾ ಗಾಂಧಿ ವಹಿಸಿಕೊಂಡಿದ್ದಾರೆ.
ಅಖಿಲೇಶ್ ಯಾದವ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಸೋನಿಯಾ ಗಾಂಧಿ, ಸೀಟು ಹಂಚಿಕೆ ಬಗ್ಗೆ ಚರ್ಚಿಸಿದ್ದಾರೆ. ಪರಿಣಾಮವಾಗಿ ಕಾಂಗ್ರೆಸ್ ನಾಯಕರಲ್ಲಿ ಉತ್ಸಾಹ ಮೂಡಿದೆ. ಸಮಾಜವಾದಿ ಪಕ್ಷ ಕಾಂಗ್ರೆಸ್ ನೊಂದಿಗೆ 100 ವಿಧಾನಸಭಾ ಕ್ಷೇತ್ರಗಳಲ್ಲಿ ಹೊಂದಾಣಿ ಮಾಡಿಕೊಳ್ಳಲು ಮುಂದಾಗಿದೆ. ಆದರೆ ಕಾಂಗ್ರೆಸ್ ಪಕ್ಷ 120 ಕ್ಷೇತ್ರಗಳಲ್ಲಿ ಸೀಟು ಹಂಚಿಕೆಯಾಗಬೇಕು ಎಂದು ಪಟ್ಟು ಹಿಡಿದಿರುವುದು ಮೈತ್ರಿಯಲ್ಲಿ ಬಿರುಕು ಮೂಡಲು ಕಾರಣವಾಗಿತ್ತು.
ಆದರೆ ಈಗ ಸೋನಿಯಾ ಗಾಂಧಿ ಮಾತುಕತೆಗೆ ಮುಂದಾಗಿದ್ದು, ಎಐಸಿಸಿ ಅಧ್ಯಕ್ಷರ ಮಧ್ಯಸ್ಥಿಕೆಯಿಂದ ಕಾಂಗ್ರೆಸ್-ಎಸ್ ಪಿ ಮೈತ್ರಿಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ಕಾಂಗ್ರೆಸ್ ನ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಚುನಾವಣೆಯಲ್ಲಿ ಉಭಯ ಪಕ್ಷಗಳಿಗೂ ಪರಸ್ಪರರ ಅಗತ್ಯತೆ ಇದೆ, ಶೀಘ್ರವೇ ಎಲ್ಲವೂ ನಿರ್ಧಾರವಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.