ನವದೆಹಲಿ: ನಗರ ವ್ಯಾಪ್ತಿಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡುವ ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಮಹತ್ವದ ಅಭಿಪ್ರಾಯ ತಿಳಿಸಿದೆ. ಇದರಿಂದಾಗಿ ಬೆಂಗಳೂರು ಮತ್ತು ಚಂಡಿಘಡ ನಗರಗಳಲ್ಲಿರುವ ಬಾರ್ ಮತ್ತು ಪಬ್ ಗಳಿಗೆ ರಿಲೀಫ್ ಸಿಕ್ಕಂತಾಗಿದೆ.
ಮಧ್ಯ ನಿಷೇಧ ಮಾಡಿದ್ದು ರಾಷ್ಟ್ರೀಯ ಹೆದ್ದಾರಿಗಳಿಗೆ ಮಾತ್ರ, ಮಧ್ಯಸೇವಿಸಿ ಚಾಲಕರು ಹೆದ್ದಾರಿಗಳಲ್ಲಿ ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದರು, ಹೀಗಾಗಿ ಹೆದ್ದಾರಿಗಳಲ್ಲಿ ಮಧ್ಯ ಮಾರಾಟ ನಿಷೇಧಕ್ಕೆ ಆದೇಶಿಸಲಾಗಿತ್ತು, ಆದರೆ ಇದನ್ನ ನಗರದೊಳಗಿರುವ ಬಾರ್ ಗಳಿಗೆ ಅನ್ವಯಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ತಿಳಿಸಿದೆ.
ನಗರ ವ್ಯಾಪ್ತಿಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಬಹುದು, ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿರುವ ಸುಪ್ರೀಂ ಡಿನೋಟಿಫೈ ಮಾಡುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗೆ ಎಂದು ಹೇಳಿದೆ.
ರಾಷ್ಟ್ರೀಯ ಹೆದ್ದಾರಿಯಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ ಬಾರ್ ಗಳನ್ನು ನಿಷೇಧಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಚಂಡಿಘಡ ಆಡಳಿತ ಪ್ರಶ್ನಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ನಗರ ವ್ಯಾಪ್ತಿಯಲ್ಲಿರುವ ಹೆದ್ದಾರಿಗಳನ್ನು ಡಿನೋಟಿಫೈ ಮಾಡುವುದು ತಪ್ಪಿಲ್ಲ ಎಂದು ಹೇಳಿದೆ.