ಉಗ್ರರ ದಾಳಿಗೆ ಬಲಿಯಾದ ಯಾತ್ರಾರ್ಥಿಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಮುಫ್ತಿ
ಶ್ರೀನಗರ: ಅಮರನಾಥ ಯಾತ್ರೆ ವೇಳೆ ಉಗ್ರ ದಾಳಿಗೆ ತುತ್ತಾದ ಯಾತ್ರಾರ್ಥಿಗಳಿಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಮಂಗಳವಾರ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಯಾತ್ರಾರ್ಥಿಗಳ ಮೃತ ದೇಹಗಳನ್ನು ತವರಿಗೆ ಕಳುಹಿಸುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್, ರಾಜ್ಯಪಾಲ ಎನ್.ಎನ್. ವೊಹ್ರಾ ಸೇರಿದಂತೆ ಇನ್ನಿತರೆ ಉನ್ನತಾಧಿಕಾರಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಯಾತ್ರೆಯಲ್ಲಿ ಉಗ್ರರ ದಾಳಿಗೆ ಮಡಿದವರ ಮೃತ ದೇಹಗಳನ್ನು ವಿಮಾನದ ಮೂಲಕ ರಾಜಧಾನಿಗೆ ಕರೆತರಲಾಗುತ್ತಿದೆ. ಅಮರನಾಥದಿಂದ ಶ್ರೀನಗರಕ್ಕೆ ಶವಗಳನ್ನು ಕೊಂಡೊಯ್ದು ಅಲ್ಲಿಂದ ವಿಮಾನಗಳ ಮೂಲಕ ಶವಗಳು ದೆಹಲಿಗೆ ಬರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಮೆಹಬೂಬಾ ಮುಫ್ತಿಯವರು, ದಾಳಿಕೋರರನ್ನು ಭದ್ರತಾ ಪಡೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸುಮ್ಮನೆ ಬಿಡುವುದಿಲ್ಲ. ಶೀಘ್ರದಲ್ಲಿಯೇ ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ತೆಗೆದುಕೊಳ್ಳಲಿರುವ ಕಠಿಣ ಕ್ರಮ ಸಮಾಜಘಾತುಕ ಶಕ್ತಿಗಳಿಗೆ ಉತ್ತಮ ಸಂದೇಶವನ್ನು ರವಾನಿಸಲಿದೆ. ಕಾನೂನಿನ ವಿರುದ್ಧ ಹೋರಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ನಿನ್ನಯಷ್ಟೇ ರಾತ್ರಿ 8.20 ಸುಮಾರಿಗೆ ಉಗ್ರರ ಗುಂಪೊಂದು ಅಮರನಾಥ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ ನಡೆಸಿತ್ತು. ಬ್ಯಾಟೆಂಗೂ ಹಾಗೂ ಖಾನಾಬಾಲ್ ಗಳಲ್ಲಿ ಶಸ್ತ್ರಸಜ್ಜಿದ ಭಯೋತ್ಪಾದಕರ ಗುಂಪು ಪೊಲೀಸ್ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿತ್ತು, ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಸಿಲುಕಿಕೊಂಡಿತ್ತು. ನಂತರ ಉಗ್ರರು ಮನೋಇಚ್ಛೆ ನಡೆಸಿದ್ದ ಗುಂಡಿನ ದಾಳಿಗೆ 7 ಯಾತ್ರಿಗಳು ಸಾವನ್ನಪ್ಪಿದ್ದರು. ಅಲ್ಲದೆ, 32ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos