ನವದೆಹಲಿ: ಖಾಸಗಿತನ ಬಹುಮುಖಿಯಾಗಿರುವುದರಿಂದ ಅದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಖಾಸಗಿತನದ ಹಕ್ಕು ಮೂಲಭೂತ ಹಕ್ಕೆ ಎಂಬುದರ ಕುರಿತು ಮುಖ್ಯನ್ಯಾಯಮೂರ್ತಿ ಜೆ.ಎಸ್.ಖೆಹರ್ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠ ವಿಚಾರಣೆ ನಡೆಸುತ್ತಿದ್ದು, ಖಾಸಗಿತನದ ಹಕ್ಕು ಮೂಲಭೂತ ಹಕ್ಕು ಅಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ವಾದಿಸಿದರು.
ಖಾಸಗಿತನಕ್ಕೆ ಯಾವುದೇ ಮೂಲಭೂತ ಹಕ್ಕು ಇಲ್ಲ. ಒಂದು ವೇಳೆ ಅದು ಮೂಲಭೂತ ಹಕ್ಕು ಎಂದು ಪರಿಗಣಿಸುವುದಾದರೆ ಖಾಸಗಿತನಕ್ಕೆ ಸಂಬಂಧಿಸಿದ ಹಲವು ಅಂಶಗಳು ಮೂಲಭೂತ ಹಕ್ಕಿನ ಅಡಿಯಲ್ಲಿ ಬರುವುದಿಲ್ಲ ಎಂದು ವೇಣುಗೋಪಾಲ್ ಹೇಳಿದ್ದಾರೆ.
ಅಟಾರ್ನಿ ಜನರಲ್ ನಿನ್ನೆಯಷ್ಟೇ ಖಾಸಗಿತನದ ಹಕ್ಕು ಮೂಲಭೂತ ಹಕ್ಕಾದರೂ ಅದು ಪರಿಪೂರ್ಣವಲ್ಲ ಎಂದಿದ್ದರು. ಅಲ್ಲದೆ 1950 ಮತ್ತು 1962ರಲ್ಲಿ ಸುಪ್ರೀಂ ಕೋರ್ಟ್ ಈ ಬಗ್ಗೆ ತೀರ್ಪು ನೀಡಿ ಖಾಸಗಿತನ ಮೂಲಭೂತ ಹಕ್ಕು ಅಲ್ಲ ಎಂದು ಹೇಳಿದ್ದನ್ನು ಉಲ್ಲೇಖಿಸಿದ್ದರು.
ಖಾಸಗಿತನ ಮೂಲಭೂತ ಹಕ್ಕಾಗಿ ಘೋಷಿಸುವಂತೆ ಕರ್ನಾಟಕ, ಪಶ್ಚಿಮ ಬಂಗಾಳ, ಪಂಜಾಬ್ ಹಾಗೂ ಪುದುಚೇರಿ ರಾಜ್ಯಗಳ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿವೆ. ತಂತ್ರಜ್ಞಾನ ಆಧುನೀಕರಣಗೊಂಡಿರುವ ಕಾಲಘಟ್ಟದಲ್ಲಿ ‘ಖಾಸಗಿ ಹಕ್ಕು’ ಕುರಿತಾಗಿ ಕೋರ್ಟ್ ಮತ್ತೊಮ್ಮೆ ಪರಾಮರ್ಶಿಸಬೇಕೆಂದು ನಾಲ್ಕು ರಾಜ್ಯಗಳು ಮನವಿ ಮಾಡಿವೆ. ಅಲ್ಲದೆ ಆಧಾರ್ ಗುರುತು ಚೀಟಿ ಮೂಲಕ ವ್ಯಕ್ತಿಯ ಬಯೋಮೆಟ್ರಿಕ್ ಮಾಹಿತಿ ಸೇರಿದಂತೆ ಖಾಸಗಿ ಮಾಹಿತಿಯನ್ನು ಸಂಗ್ರಹಿಸುವುದು ಹಾಗೂ ಹಂಚುವುದು ಖಾಸಗಿತನದ ’ಮೂಲಭೂತ’ ಹಕ್ಕು ಉಲ್ಲಂಘಿಸಿದಂತೆ ಆಗಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಆದರೆ ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕಾಗಿಸಲು ಸಾಧ್ಯವಿಲ್ಲ ಎಂಬ ವಾದವನ್ನು ಕೇಂದ್ರ ಸರ್ಕಾರ ಮುಂದುವರಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos