ಲಖನೌ: ಉತ್ತರ ಪ್ರದೇಶ ಸರ್ಕಾರ ಆದಷ್ಟು ಬೇಗ ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಮೂಲ ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲದಿದ್ದರೆ ಮಧ್ಯಪ್ರದೇಶದ ಮಂಡಸೌರ್ ರೀತಿಯ ಹಿಂಸಾತ್ಮಕ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ರೈತ ಮುಖಂಡರೊಬ್ಬರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲಿ ರೈತರ ಸಾಲ ಮನ್ನಾ ಮಾಡಿದ ಯೋಗಿ ಆದಿತ್ಯನಾಥ್ ಅವರು, ರೈತರ ತಾವು ಬೆಳದೆ ಬೆಳಗೆ ಬೆಂಬಲ ಬೆಲೆ ನೀಡದಿರುವುದು ದೊಡ್ಡ ದುರಂತ ಎಂದು ರಾಷ್ಟ್ರೀಯ ಕಿಸಾನ್ ಮಂಚ್ ನ ರಾಷ್ಟ್ರೀಯ ಅಧ್ಯಕ್ಷ ಶೇಖರ್ ದಿಕ್ಷಿತ್ ಅವರು ಹೇಳಿದ್ದಾರೆ.
ರೈತರ ಸಮಸ್ಯೆಗಳ ಬಗ್ಗೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿಜಕ್ಕೂ ಕಾಳಜಿ ಇದ್ದರೆ ಈ ಕೂಡಲೇ ಬೆಂಬಲ ಬೆಲೆ ಘೋಷಿಸುವುದು ಸೇರಿದಂತೆ ರೈತರ ಇತರೆ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲದಿದ್ದರೆ ಮಂಡಸೌರ್ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ ಮಂಗಳವಾರ ಮಂಡಸೌರ್ ನಲ್ಲಿ ಐವರು ರೈತರನ್ನು ಬಲಿ ಪಡೆದ ಗೋಲಿಬಾರ್ ಬಗ್ಗೆ ಪಿಟಿಐಗೆ ಪ್ರತಿಕ್ರಿಯಿಸಿದ ದಿಕ್ಷಿತ್ ಅವರು, ಸಾಲ ಮನ್ನಾ ರೈತರ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಲ್ಲ ಎಂದಿದ್ದಾರೆ.