ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಬುಧವಾರ ರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಯಾರು ಎಂಬುದು ಇನ್ನು ಬಹಿರಂಗವಾಗಿಲ್ಲ. ಆದರೆ ಜೂನ್ 23ಕ್ಕೆ ಎನ್ ಡಿಎ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ಎವ್ ಐ ವರದಿ ಮಾಡಿದೆ.
ರಾಷ್ಟ್ರಪತಿ ಚುನಾವಣಾ ಸಮಿತಿಯ ಸದಸ್ಯರಾಗಿರುವ ಬಿಜೆಪಿ ಹಿರಿಯ ನಾಯಕರಾದ ಎಂ.ವೆಂಕಯ್ಯ ನಾಯ್ಡು ಹಾಗೂ ರಾಜನಾಥ್ ಸಿಂಗ್ ಅವರು ಎನ್ ಡಿಎ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಆಡಳಿತರೂಢ ಎನ್ಡಿಎ ಮತ್ತು ಪ್ರತಿಪಕ್ಷಗಳು ಪರಸ್ಪರರಿಗೆ ಒಪ್ಪಿಗೆ ಇರುವ ಅಭ್ಯರ್ಥಿಯ ಶೋಧ ಕಾರ್ಯದಲ್ಲಿ ತೊಡಗಿವೆ. ಆದರೆ ಒಮ್ಮತ ಮೂಡದಿದ್ದ ಸಂದರ್ಭದಲ್ಲಿ ಅವು ಪ್ರತ್ಯೇಕ ಮಾರ್ಗದಲ್ಲಿ ಸಾಗುವ ಸಾಧ್ಯತೆ ಇದೆ.
ಈ ಮಧ್ಯೆ ಪ್ರತಿಪಕ್ಷಗಳ ನಾಯಕರು ಸಹ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಸಂಬಂಧ ಭಾರಿ ಕಸರತ್ತು ನಡೆಸುತ್ತಿದ್ದು, ಇಂದು ಮಧ್ಯಾಹ್ನ ಸಭೆ ಸೇರಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಜುಲೈ 17ರಂದು ನಡೆಯುವ ರಾಷ್ಟ್ರಪತಿ ಚುನಾವಣೆಗೆ ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 20ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.