ನವದೆಹಲಿ: ಭೂ ದಾಖಲೆಗಳ ಡಿಜಿಟಲಿಕರಣ ಮತ್ತು ಭೂ ದಾಖಲೆಗಳಿಗೆ ಆಧಾರ್ ಲಿಂಕ್ ಮಾಡುಬೇಕು ಎಂಬ ನಕಲಿ ಸರ್ಕಾರಿ ಆದೇಶದ ಪತ್ರವನ್ನು ಸಾಮಾಜಿಕ ಮಾಧ್ಯಗಳಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ನಕಲಿ ಸರ್ಕಾರಿ ಆದೇಶದ ಮೂಲ ಪತ್ತೆ ಹಚ್ಚುವುದು ತುಂಬಾ ಕಷ್ಟ ಎಂದು ದೆಹಲಿ ಉಪ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಜೂನ್ 15ರಂದು ನಕಲಿ ಸರ್ಕಾರಿ ಆದೇಶ ಹೊರಡಿಸಿರುವ ಬಗ್ಗೆ ಸಂಪುಟ ಸಚಿವಾಲಯದ ಕಾರ್ಯದರ್ಶಿ ಶಿಯೋನಾಥ್ ಸಿಂಗ್ ಅವರು ಸೋಮವಾರ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.
ತಮ್ಮ ಸಹಿಯುಳ್ಳ ನಕಲಿ ಸರ್ಕಾರಿ ಆದೇಶವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಸ್ಪಷ್ಟನೆ ಕೇಳಿ ತಮಗೆ ದೂರವಾಣಿ ಕರೆಗಳು ಬರುತ್ತಿವೆ ಎಂದು ಸಿಂಗ್ ಅವರು ದೂರಿನಲ್ಲಿ ವಿವರಿಸಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ನಕಲಿ ಪತ್ರದಲ್ಲಿ ೨೦೧೭, ಆಗಸ್ಟ್ ೧೪ರೊಳಗೆ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಆಧಾರ್ ಸಂಖ್ಯೆಗೆ ಜೋಡಣೆ ಮಾಡಬೇಕು ಎಂದು ಸೂಚಿಸಲಾಗಿತ್ತು. ಅಲ್ಲದೆ ಆಧಾರ್ ಲಿಂಕ್ ಮಾಡದಿದ್ದರೆ ಬೇನಾಮಿ ವ್ಯವಹಾರ ತಡೆ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಲಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos