ಕೋಲ್ಕತಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕರ್ಣನ್
ನವದೆಹಲಿ: ಜೈಲು ಶಿಕ್ಷೆ ಅಮಾನತು ಮಾಡುವಂತೆ ಕೋರಿ ಕೋಲ್ಕತಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕರ್ಣನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ.
ನ್ಯಾಯಾಂಗ ನಿಂದನೆ ಪ್ರಕರಣ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೇ ಜೈಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ನಿಂದ ಜೈಲು ಶಿಕ್ಷೆಗೆ ಗುರಿಯಾಗಿರುವ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ನಿವೃತ್ತ ಕರ್ಣನ್ ಅವರು, ತಮ್ಮ ವಿರುದ್ಧದ ತೀರ್ಪನ್ನು ಅಮಾನತು ಮಾಡುವಂತೆ ಕೋರಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಇಂದು ಪರಿಶೀಲನೆ ನಡೆಸಿರುವ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಸಂಜಯ್ ಕಿಶನ್ ಅವರಿದ್ದ ಪೀಠ, ಈ ವಿಚಾರದಲ್ಲಿ ಯಾವುದೇ ರೀತಿಯ ವಿನಾಯಿತಿ ನೀಡುವುದಿಲ್ಲ ಎಂದು ತಿಳಿಸಿದೆ.
ಅರ್ಜಿ ಸಂಬಂಧ ವಿಚಾರಣೆ ಆರಂಭವಾದ ಬಳಿಕ ಕರ್ಣನ್ ಪರ ವಕೀಲರಾದ ನೆಡುಂಪರ ಅವರು ವಾದ ಮಂಡಿಸಿದರು. ಕರ್ಣನ್ ಅವರಿಗೆ ನೀಡಲಾಗಿರುವ 6 ತಿಂಗಳ ಜೈಲು ಶಿಕ್ಷೆಯನ್ನು ಅಮಾನತು ಮಾಡುವಂತೆ ಹಾಗೂ ಜಾಮೀನು ನೀಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡರು. 7 ನ್ಯಾಯಾಧೀಶರಿದ್ದ ಪೀಠ ಆದೇಶವನ್ನು ನೀಡಿದ್ದು, ಆದೇಶ ಎಲ್ಲರೂ ತಲೆ ಬಾಗುವಂತೆ ಮಾಡಿದೆ ಎಂದು ತಿಳಿಸಿದರು. ವಾದಗಳನ್ನು ಆಲಿಸಿದ ನ್ಯಾಯಾಲಯ, ಕರ್ಣನ್ ಅವರಿಗೆ ಯಾವುದೇ ರೀತಿಯ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಭಾರತೀಯ ನ್ಯಾಯಾಂಗದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿಯ ವಿರುದ್ಧ ಸರ್ವೋಚ್ಛ ನ್ಯಾಯಾಲಯ ನ್ಯಾಯಾಂಗ ನಿಂದನೆಯ ನೋಟೀಸ್ ಜಾರಿ ಮಾಡಿತ್ತು.
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಅಸ್ತಿತ್ವದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ಕರ್ಣನ್ ಅವರು ಹೊಸ ವಿವಾದ ಸೃಷ್ಟಿಸಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅವರ ನ್ಯಾಯಾಂಗ ಬಂಧನಕ್ಕೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಮೇ 9ರಂದು ಕರ್ಣನ್ ನಾಪತ್ತೆಯಾಗಿದ್ದರು. ಕರ್ಣನ್ ಅವರನ್ನು ಬಂಧಿಸಲು ಪಶ್ಚಿಮ ಬಂಗಾಳದ ಸಿಐಡಿ ಅಧಿಕಾರಿಗಳು ಮುಂದಾಗಿದ್ದರು. ಅಂತಿಮವಾಗಿ ನಿನ್ನೆ ಕೊಯಮತ್ತೂರಿನಲ್ಲಿ ಸಿಐಡಿ ಅಧಿಕಾರಿಗಳು ಮತ್ತು ತಮಿಳುನಾಡು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧನಕ್ಕೊಳಪಡಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos