ಅಲಹಬಾದ್: ಜವಾಹರ್ ಬಾಘ್ ಹಿಂಸಾಚಾರ ಪ್ರಕರಣವನ್ನು ತನಿಖೆ ನಡೆಸುವಂತೆ ಗುರುವಾರ ಅಲಹಬಾದ್ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ.
ಕಳೆದ ವರ್ಷ ಜೂನ್ ನಲ್ಲಿ ಮಥುರಾದ ಜವಾಹರ್ ಬಾಘ್ ಪ್ರದೇಶದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪೊಲೀಸರು ಮತ್ತು ಒತ್ತುವರಿದಾರರ ನಡುವೆ ನಡೆದ ಹಿಂಸಾಚಾರದಲ್ಲಿ ಇಬ್ಬರು ಪೊಲೀಸರು ಸೇರಿದಂತೆ 24 ಮಂದಿ ಮೃತಪಟ್ಟಿದ್ದರು.
ಹಿಂಸಾಚಾರ ಪ್ರಕರಣ ಸಂಬಂಧ ಪೊಲೀಸರು ದಂಗೆ ಮತ್ತು ಕೊಲೆ ಆರೋಪದ ಮೇಲೆ 124 ಮಂದಿಯನ್ನು ಬಂಧಿಸಿದ್ದಾರೆ.
ಸುಮಾರು 260 ಎಕರೆ ವಿಸ್ತೀರ್ಣದಲ್ಲಿ ಜವಾಹರ್ ಬಾಘ್ ಉದ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಎರಡು ವರ್ಷಗಳಿಂದ ಅನಧಿಕೃತವಾಗಿ ಠಿಕಾಣಿ ಹೂಡಿರುವ 3000 ನಿವಾಸಿಗಳನ್ನು ತೆರವುಗೊಳಿಸುವಂತೆ ಅಲಹಬಾದ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ತೆರವು ಕಾರ್ಯಾಚರಣೆಗೆ ಮುಂದಾಗಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ನಿವಾಸಿಗಳು ಪೊಲೀಸರ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು.