ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸಲು ನಿರ್ಧರಿಸಿರುವ ಬೆನ್ನಲ್ಲೇ, ವಿಳಂಬ ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ಬೇಸರ ವ್ಯಕ್ತಪಡಿಸಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಪಿಸಿ. ಫೋಷ್, ಆರ್ ಎಫ್ ನಾರಿಮನ್ ಅವರಿದ್ದ ನ್ಯಾಯಪೀಠ, ಪ್ರಕರಣದಲ್ಲಿ ಆರೋಪಗಳನ್ನು ಎದುರಿಸುತ್ತಿರುವವರ ವಿರುದ್ಧದ ವಿಚಾರಣೆ ವಿಳಂಬವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿತು. ಅಲ್ಲದೆ, ಮಾರ್ಚ್ 22ಕ್ಕೆ ವಿಚಾರಣೆಯನ್ನು ಮುಂದೂಡಿತು.
ಮಾರ್ಚ್. 22 ರಂದು ನಡೆಯಲಿರುವ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಹೊರಡಿಸುವ ಸಾಧ್ಯತೆಗಳಿದ್ದು, ಈ ಹಿನ್ನಲೆಯಲ್ಲಿ ಆರೋಪ ಎದುರಿಸುತ್ತಿರುವ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳು ಮನೋಹರ ಜೋಷಿ, ಕೇಂದ್ರ ಸಚಿವೆ ಉಮಾ ಭಾರತಿ, ರಾಜಸ್ತಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಮತ್ತು ಮತ್ತಿತರ ನಾಯಕರಿಗೆ ಬಾಬ್ರಿ ಮಸೀದಿ ರೂಪದಲ್ಲಿ ಕಂಟಕ ಎದುರಾಗಿದೆ.
ಈ ಹಿಂದೆ ಅಲಹಾಬಾದ್ ಹೈಕೋರ್ಟ್ ಅಡ್ವಾಣಿ, ಜೋಷಿ, ಉಮಾಭಾರತಿ, ಕಲ್ಯಾಣ್ ಸಿಂಗ್ ಹಾಗೂ ಮತ್ತಿತರರನ್ನು ಆರೋಪ ಮುಕ್ತಗೊಳಿಸಿತ್ತು. ಆದರೆ, ಸಿಬಿಐ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಸುಪ್ರೀಂನಲ್ಲಿ ಪ್ರಶ್ನೆ ಮಾಡಿತ್ತು. ಪ್ರಸ್ತುತ ಈ ಕುರಿತ ವಿಚಾರಣೆ ಕೂಡ ಮುಂದುವರೆದಿದೆ.