ಲಖನೌ: ಬಿಜೆಪಿಯ ಚುನಾವಣೆ ಪ್ರಣಾಳಿಕೆಯನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿರುವ ಕಸಾಯಿಖಾನೆಗಳನ್ನು ಬಂದ್ ಮಾಡುವಂತೆ ಮತ್ತು ಗೋವುಗಳ ಕಳ್ಳಸಾಗಣೆಯನ್ನು ನಿಷೇಧಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯಾದ್ಯಂತ ಇರುವ ಕಸಾಯಿಖಾನೆಗಳನ್ನು ಬಂದ್ ಮಾಡಲು ಕಾರ್ಯಯೋಜನೆ ರೂಪಿಸುವಂತೆ ಯೋಗಿ ಆದಿತ್ಯನಾಥ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಯಾವ ರೀತಿಯ ಕಸಾಯಿಖಾನೆಗಳನ್ನು ಬಂದ್ ಮಾಡಲಾಗುತ್ತಿದೆ ಎಂಬುದರ ಬಗ್ಗೆ ಅಧಿಕಾರಿಗಳು ಸ್ಪಷ್ಟವಾಗಿ ತಿಳಿಸಿಲ್ಲ.
ವಿಧಾನಸಭೆ ವೇಳೆ ಬಿಜೆಪಿ ಬಿಡುಗಡೆ ಮಾಡಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಲಾಗುವುದು ಮತ್ತು ಯಾಂತ್ರಿಕೃತ ಕಸಾಯಿಖಾನೆಗಳನ್ನು ಸಂಪೂರ್ಣ ಬಂದ್ ಮಾಡುವುದಾಗಿ ಭರವಸೆ ನೀಡಲಾಗಿತ್ತು.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಹ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಸಾಯಿಖಾನೆಗಳನ್ನು ಬಂದ್ ಮಾಡಲಾಗುವುದು ಎಂದು ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದರು. ಇದೀಗ ಅದನ್ನು ಜಾರಿಗೆ ತಂದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ, ಸಮಾಜ ವಿರೋಧಿ ಕೃತ್ಯಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.