ಕೊಲ್ಕೊತಾ ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಸ್ ಕರ್ಣನ್
ಕೊಲ್ಕೊತಾ: ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಸ್.ಕರ್ಣನ್ ತಮ್ಮ ಕಾನೂನು ಸಮರ ಮುಂದುವರಿಸಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಹಾಗೂ ಮತ್ತಿತರ 7 ಜನ ಸುಪ್ರೀಂಕೋರ್ಟ್ ಜಡ್ಜ್ಗಳಿಗೆ ತಲಾ 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಕರ್ಣನ್ ಆದೇಶ ಹೊರಡಿಸಿದ್ದಾರೆ.
ಎಂಟು ನ್ಯಾಯಮೂರ್ತಿಗಳು 1989ರ ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಶಿಕ್ಷಿಸಬಹುದಾದ ಅಪರಾಧ ಎಸಗಿದ್ದಾರೆ ಎಂದು ಕರ್ಣನ್ ಹೇಳಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಖೇಹರ್ ಹಾಗೂ ಇತರ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಜೆ ಚೆಲಮೇಶ್ವರ್, ರಂಜನ್ ಗೊಗೋಯ್, ಮದನ್ ಬಿ. ಲೋಕುರ್, ಪಿಣಾಕಿ ಚಂದ್ರ ಘೋಷ್, ಕುರಿಯನ್ ಜೋಸೆಫ್ ಮತ್ತು ಆರ್.ಭಾನುಮತಿ ಅವರಿಗೆ ತಲಾ 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.
ಏಳು ನ್ಯಾಯಮೂರ್ತಿಗಳ ಪೀಠವು ಸ್ವಯಂ ಪ್ರೇರಣೆಯಿಂದ ಕರ್ಣನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿತ್ತು. ಅವರು ನ್ಯಾಯಾಂಗ ಮತ್ತು ಆಡಳಿತಾತ್ಮಕ ಕೆಲಸಗಳನ್ನು ಮಾಡದಂತೆ ನಿಷೇಧ ಹೇರಿತ್ತು.
ಈ ಎಂಟೂ ನ್ಯಾಯಮೂರ್ತಿಗಳು ನ್ಯಾಯಾಂಗ ಮತ್ತು ಆಡಳಿತಾತ್ಮಕ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ದಲಿತ ನ್ಯಾಯಮೂರ್ತಿಯೊಬ್ಬರಿಗೆ ಕಿರುಕುಳ ನೀಡಿ ಅವಮಾನಿಸಿದ್ದಾರೆ ಎಂದು ಕರ್ಣನ್ ದೂರಿದ್ದಾರೆ.
ಕಳೆದ ಗುರುವಾರದೊಳಗೆ (ಮೇ 4) ಕರ್ಣನ್ ಅವರ ಮಾನಸಿಕ ಆರೋಗ್ಯ ಪರೀಕ್ಷೆ ನಡೆಸಿ ವರದಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ಈ ಪರೀಕ್ಷೆಗೆ ಒಳಗಾಗಲು ನಿರಾಕರಿಸಿದ್ದ ಅವರು ನನ್ನ ಮಿದುಳು ಸ್ಥಿರವಾಗಿದೆ ಎಂದು ಹೇಳಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos