ಬೆಂಗಳೂರು: ಎಲ್ಲಾ ಪಡಿತರ ಅಂಗಡಿಗಳಲ್ಲಿ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಸಾಧನಗಳನ್ನು ಅಳವಡಿಸಬೇಕೆಂಬ ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಪಿಒಎಸ್ ಸಾಧನಗಳನ್ನು ಅಳವಡಿಸಿಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಏ.13 ರಂದು ಆದೇಶ ಹೊರಡಿಸಿತ್ತು. ಆದರೆ ಸರಿಯಾದ ವಿದ್ಯುತ್ ಪೂರೈಕೆ ಇಲ್ಲದೆ ಇದ್ದ ಕಾರಣ ಪಿಒಎಸ್ ಗಳನ್ನು ಬಳಕೆ ಮಾಡಲಾಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ಚಿಕ್ಕಮಗಳೂರಿನ ಲಕ್ಷ್ಮಿ ಹಾಗೂ 35 ಜನರು ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾ.ವಿ ವೀರಪ್ಪ, ಇಲಾಖೆಯ ಆದೇಶಕ್ಕೆ ತಡೆ ನೀಡಿದ್ದು, ಅನಿರ್ಬಂಧಿತ ವಿದ್ಯುತ್ ಪೂರೈಕೆ ಹಾಗೂ ಇಂಟರ್ ನೆಟ್ ಸಂಪರ್ಕ ನೀಡಲು ಎಷ್ಟು ಸಮಯ ಬೇಕು ಎಂದು ಪ್ರಶ್ನಿಸಿದ್ದಾರೆ.
ಪಿಒಎಸ್ ಸಾಧನಗಳ ಅಳವಡಿಕೆಯನ್ನು ಕಡ್ಡಾಯಗೊಳಿಸುವ ಮುನ್ನ ಆಹಾರ ಇಲಾಖೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತು. ವಿದ್ಯುತ್ ಪೂರೈಕೆ ವ್ಯತ್ಯಯ, ಇಂಟರ್ ನೆಟ್ ಸಮಸ್ಯೆಗಳಿಂದಾಗಿ ಪಿಒಎಸ್ ಗಳನ್ನು ಬಳಕೆ ಮಾಡಲಾಗುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲ ಎಂಆರ್ ರಾಜಗೋಪಾಲ್ ವಾದ ಮಂಡಿಸಿದ್ದಾರೆ.
ಅರ್ಜಿದಾರರ ಪರ ವಕೀಲರ ವಾದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರಿ ವಕೀಲರು ಪಿಒಎಸ್ ಸಾಧನ ಅಳವಡಿಕೆ ನಗರ ಪ್ರದೇಶಗಳಿಗಷ್ಟೇ ಕಡ್ಡಾಯವಾಗಿದ್ದು ಗ್ರಾಮೀಣ ಭಾಗಗಳಿಗೆ ಕಡ್ಡಾಯ ಮಾಡಲಾಗಿಲ್ಲ ಎಂದು ಕೋರ್ಟ್ ಗೆ ತಿಳಿಸಿದ್ದಾರೆ.