ನವದೆಹಲಿ: ಹಣಕಾಸು ಪರಿಸ್ಥಿತಿ ಮತ್ತು ದಿವಾಳಿ ನೀತಿಸಂಹಿತೆಯಲ್ಲಿ ಕೆಲ ತಿದ್ದುಪಡಿ ತರುವ ಸಲುವಾಗಿ ರವಾನಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ ನೀಡಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಹಣಕಾಸು ಪರಿಸ್ಥಿತಿ ಮತ್ತು ದಿವಾಳಿ ಸಂಹಿತೆ ಸುಗ್ರೀವಾಜ್ಞೆ ಕುರಿತು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಬಳಿಕ ಸುಗ್ರೀವಾಜ್ಞೆಯನ್ನು ರಾಷ್ಟ್ರಪತಿಗಳ ಅನುಮೋದನೆಗೆ ರವಾನಿಸಲಾಗಿತ್ತು. ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸುಗ್ರೀವಾಜ್ಞೆಗೆ ಸಹಿ ಮಾಡಿದ್ದಾರೆ.
ಈ ಬಗ್ಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಕೇಂದ್ರ ವಿತ್ತ ಹಾಗೂ ಕಂಪನಿ ವ್ಯವಹಾರಗಳ ಸಚಿವ ಅರುಣ್ ಜೇಟ್ಲಿ ಅವರು, ಕಾಲಮಿತಿಗೆ ಒಳಪಟ್ಟು ಬ್ಯಾಂಕ್ ಗಳ ಸಾಲ ವಸೂಲಾತಿ ಪ್ರಕ್ರಿಯೆ ನಡೆಸಲು ಕಳೆದ ವರ್ಷದ ಡಿಸೆಂಬರ್ನಿಂದಲೇ ಈ ಸಂಹಿತೆ ಜಾರಿಗೆ ತರಲಾಗಿದ್ದು, ಕಂಪನಿ ವ್ಯವಹಾರ ಸಚಿವಾಲಯವು ಇದನ್ನು ಕಾರ್ಯಗತಗೊಳಿಸುತ್ತಿದೆ ಎಂದು ಹೇಳಿದ್ದರು. ಇನ್ನು ಪ್ರಸ್ತುತ ಕೇಂದ್ರ ಸರ್ಕಾರ ತಿದ್ದುಪಡಿಗೆ ಮುಂದಾಗಿರುವ ಅಂಶಗಳು ಮಾಹಿತಿ ಲಭ್ಯವಾಗದೇ ಹೋದರೂ, ಈ ಕಾಯ್ದೆಯ ವಿವಿಧ ವಿಷಯಗಳ ಬಗ್ಗೆ ಉದ್ಯಮ ವಲಯದಲ್ಲಿ ಕೇಳಿ ಬರುತ್ತಿರುವ ಕಳವಳದ ಕಾರಣಕ್ಕೆ ತಿದ್ದುಪಡಿ ತರಲಾಗುತ್ತಿದೆ ಎನ್ನಲಾಗಿದೆ.
ಇನ್ನು ಕೆಲ ಕಾರ್ಪೋರೇಟ್ ಸಂಸ್ಥೆಗಳು ಪ್ರಸ್ತುತ ಇರುವ ಹಣಕಾಸು ಪರಿಸ್ಥಿತಿ ಮತ್ತು ದಿವಾಳಿ ನೀತಿಗಳನ್ನು ದುರ್ಬಳಕೆ ಮಾಡಿಕೊಂಡು ಕಪ್ಪುಹಣವನ್ನು ವ್ಯವಸ್ಥಿತವಾಗಿ ಬಳಕೆ ಮಾಡಿಕೊಳ್ಳುತ್ತಿವೆ. ಅಲ್ಲದೆ ನಕಲಿ ಸಂಸ್ಥೆಗಳ ಹೆಸರಲ್ಲಿ ನಡೆಯುತ್ತಿರುವ ಮೋಸದ ಪ್ರಕರಣಗಳನ್ನೂ ಈ ನೂತನ ಕಾನೂನಿನ ಮೂಲಕ ತಡೆಯಬಹುದಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos