ಮುಂಬೈ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ನಾರಾಯಣ್ ರಾಣೆ ಅವರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಕೈ ನಾಯಕನನ್ನು ಕೇಸರಿ ಪಡೆಗೆ ಸೇರಿಸಿಕೊಳ್ಳಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
ಈ ಮಧ್ಯೆ ರಾಣೆ ಅವರು ಸೆಪ್ಟೆಂಬರ್ 21ರಂದು ತಮ್ಮ ಮುಂದಿನ ರಾಜಕೀಯ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ. ಆದರೆ ಸೆಪ್ಟೆಂಬರ್ 24-25ರಂದು ನಡೆಯುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಗೂ ಮುನ್ನ ಕೇಸರಿ ಪಡೆ ಸೇರುತ್ತಾರೆ ಎಂಬುದರ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆ ಇಲ್ಲ.
ನಾರಾಯಣ ರಾಣೆ ಅವರು ಹಲವು ಬಾರಿ ತಾವು ಬಿಜೆಪಿ ಸೇರುವ ಸುಳಿವು ನೀಡಿದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮಹಾರಾಷ್ಟ್ರ ಬಿಜೆಪಿಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಇಲ್ಲ. ಪಕ್ಷದ ಅಧ್ಯಕ್ಷರಾದ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ರಾಣೆಯನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಆದರೆ ರಾಣೆ ಪಕ್ಷಾಂತರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ರಾಣೆಯನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಕ್ಕೆ ಫಡ್ನವಿಸ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ 2019ರ ಲೋಕಸಭೆ ಚುನಾವಣೆ ಗೆಲುವಿಗೆ ತಂತ್ರ ರೂಪಿಸುತ್ತಿರುವ ಅಮಿತ್ ಶಾ ಕಾಂಗ್ರೆಸ್ ನಾಯಕನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ನಾರಾಯಣ ರಾಣೆ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಮಹಾರಾಷ್ಟ್ರದಲ್ಲಿ ಬಿಜೆಪಿ- ಶಿವಸೇನಾ ಮೈತ್ರಿಗೆ ಧಕ್ಕೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos