ನವದೆಹಲಿ: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ವಿದೇಶದಲ್ಲಿರುವ ತಮ್ಮ ಹಲವು ಬ್ಯಾಂಕ್ ಖಾತೆಗಳನ್ನು ಕ್ಲೋಸ್ ಮಾಡುತ್ತಿರುವುದರಿಂದ ಅವರ ವಿದೇಶ ಪ್ರಯಾಣ ತಡೆಯುವುದಕ್ಕಾಗಿ ಲುಕ್ ಔಟ್ ನೋಟಿಸ್ ನೀಡಿರುವುದಾಗಿ ಸಿಬಿಐ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಕಾರ್ತಿ ಚಿದಂಬರಂ ವಿರುದ್ಧದ ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಹಲವು ಮಹತ್ವದ ಸಾಕ್ಷ್ಯಗಳು ಸಿಕ್ಕಿವೆ ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಗೆ ತನಿಖಾ ಸಂಸ್ಥೆ ವಿವರಿಸಿದೆ.
ಕಾರ್ತಿ ಚಿದಂಬರಂ ವಿರುದ್ಧ ತನಿಖೆಗೆ ಸಂಬಂಧಿಸಿದ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ ಗೆ ನೀಡಲು ಸಿಬಿಐ ಬಯಸಿದೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ಪೀಠಕ್ಕೆ ತಿಳಿಸಿದೆ. ಆದರೆ ಇದಕ್ಕೆ ಆರೋಪಿ ಪರ ವಕೀಲ ಕಪಿಲ್ ಸಿಬಲ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರಿಗೆ ಸಿಬಿಐ ಹಲವು ಬಾರಿ ಸಮನ್ಸ್ ಜಾರಿ ಮಾಡಿದೆ. ಆದರೂ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರ್ತಿ ವಿರುದ್ಧ ಸಿಬಿಐ ಲುಕ್ ಔಟ್ ನೋಟಿಸ್ ಸಹ ನೀಡಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos