ನವದೆಹಲಿ: ಕುಟುಂಬ ರಾಜಕೀಯ ಸಮರ್ಥಿಸಿಕೊಂಡ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಸಾಧನೆ ಆಧರಿಸಿದ ರಾಜಕೀಯಕ್ಕೆ ಮಹತ್ವ ನೀಡುತ್ತದೆ. ಆದರೆ ಕಾಂಗ್ರೆಸ್ ಕುಟುಂಬ ರಾಜಕೀಯ ಮತ್ತು ಓಲೈಕೆ ರಾಜಕೀಯ ಮಾಡುತ್ತದೆ ಎಂದು ಆರೋಪಿಸಿದ್ದಾರೆ.
ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಪ್ರಸ್ತೂತ ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ವಿನಮ್ರ ಮೂಲದ ಹೊರತಾಗಿ ತಮ್ಮ ಕಠಿಣ ಶ್ರಮದಿಂದಾಗಿ ಇಂದು ಆ ಉನ್ನತ ಹುದ್ದೆಗೇರಿದ್ದಾರೆ ಎಂದು ತಿಳಿಸಿದರು.
ಯುಪಿಎ ಸರ್ಕಾರದ ಅವಧಿಗಿಂತಲೂ ಎನ್ ಡಿಎ ಸರ್ಕಾರದ ಅವಧಿಯಲ್ಲಿ ದೇಶದ ಆರ್ಥಿಕತೆ ಬಲಿಷ್ಠವಾಗಿದೆ ಎಂದು ಶಾ ಹೇಳಿರುವುದಾಗಿ ಕೇಂದ್ರ ಸಚಿವ ಪಿಯುಶ್ ಗೋಯಲ್ ಅವರು ಅಧ್ಯಕ್ಷರ ಭಾಷಣದ ಬಗ್ಗೆ ವರದಿಗಾರರಿಗೆ ತಿಳಿಸಿದ್ದಾರೆ.
ಇದೇ ವೇಳೆ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ಹಾಗೂ ಕೇರಳದ ಎಡಪಕ್ಷ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಅಮಿತ್ ಶಾ, ಆ ಎರಡು ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ರಾಜಕೀಯ ಹಿಂಸಾಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಚಾಲನೆ ದೊರೆತ್ತಿದ್ದು, ಪಕ್ಷದ ನಾಯಕರಿಗೆ ಪ್ರಧಾನಿ ಮೋದಿ ಕೆಲವೊಂದು ಮಹತ್ವದ ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ನೋಟು ಅಮಾನ್ಯೀಕರಣದ ನಂತರ ಆರ್ಥಿಕ ಪ್ರಗತಿ ಕುಂಠಿತವಾಗಿದೆ ಎಂಬ ಅಸಮಾಧಾನ ಭುಗಿಲೆದ್ದಿರುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರದ ಸದೃಢ ಆರ್ಥಿಕ ನೀತಿಗಳು, ಜಿಎಸ್ಟಿ ಅನುಷ್ಠಾನದ ಫಲಶೃತಿಗಳ ಬಗ್ಗೆ ಮತ್ತಷ್ಟು ಪ್ರಚಾರವನ್ನು ರಾಜ್ಯಗಳಲ್ಲಿ ಕೈಗೊಳ್ಳುವಂತೆ ಮೋದಿ ಪಕ್ಷದ ಮುಖಂಡರು ಮತ್ತು ರಾಷ್ಟ್ರೀಯ ಪದಾಧಿಕಾರಿಗಳು ಸೂಚಿಸಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos