ಪ್ರತಿಭಟನಾ ಸ್ಥಳದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸರು
ವಾರಣಾಸಿ: ಲೈಂಗಿಕ ಕಿರುಕುಳ ಪ್ರಕರಣ ಖಂಡಿಸಿ ಉತ್ತರಪ್ರದೇಶದ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆಸಲಾಗುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ 1000 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ.
ಬನಾರಸ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ನಿನ್ನೆಯಷ್ಟೇ ತೀವ್ರವಾಗಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯುವ ಸಲುವಾಗಿ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದರು. ಅಷ್ಟೇ ಅಲ್ಲದೇ. ವಿದ್ಯಾರ್ಥಿಗಳನ್ನು ಜುಟ್ಟು ಹಿಡಿದು ಎಳೆದೊಯ್ದಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ಪ್ರತಿಭಟನೆ ಬಳಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಹಿಂಸಾಚಾರದ ಸೃಷ್ಟಿಯಾಗಿತ್ತು. ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದ್ದು, ಇತರೆ ಕಾಲೇಜುಗಳನ್ನೂ ಕೂಡ ಮುಚ್ಚಲಾಗಿದೆ.
ಘಟನೆ ಬಳಿಕ ವಿದ್ಯಾರ್ಥನಿಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವತು ತನಿಖೆಗೆ ಆದೇಶಿಸಿದ್ದಾರೆ.
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ವಾರಣಾಸಿ ಹಿರಿಯ ಪೊಲೀಸ್ ಅಧಿಕಾರಿ, ಪ್ರತಿಭಟನೆ ನಡೆಸುತ್ತಿದ್ದ 1,000 ವಿದ್ಯಾರ್ಥಿಗಳ ವಿರುದ್ಧ ವಿವಿಧ ಪ್ರಕರಣಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ವಿಶ್ವವಿದ್ಯಾಲಯದ ತೃತೀಯ ವರ್ಷದ ಇಬ್ಬರು ವಿದ್ಯಾರ್ಥಿನಿಯರು ಕಳೆದ ಗುರುವಾರ ರಾತ್ರಿ ತಮ್ಮ ಹಾಸ್ಟೆಲ್ ಗೆ ಹಿಂದಿರುತ್ತಿದ್ದ ವೇಲೆ ಭಾರತ್ ಕಲಾ ಭವನ್ ಬಳಿ ಬೈಕ್ ನಲ್ಲಿ ಬಂದಿರುವ ಬೀದಿ ಕಾಮಣ್ಣರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಹೇಳಲಾಗುತ್ತಿತ್ತು.
ಈ ಬಗ್ಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ನ ಭದ್ರತಾ ಸಿಬ್ಬಂದಿಯ ಮೇಲ್ವಿಚಾರಕರಿಗೆ ಮಾಹಿತಿ ನೀಡಿದ್ದರು. ಆದರೆ, ವಿದ್ಯಾರ್ಥಿನಿಯರ ನೆರವಿಗೆ ಬರಬೇಕಿದ್ದ ಮೇಲ್ವಿಚಾರಕರು, ಸಂಜೆ ಬಳಿಕ ಹಾಸ್ಟೆಲ್ ಬಿಟ್ಟು ಹೊರಗಡೆ ಹೋಗಿದ್ದು ಯಾಕೆ ಎಂದು ವಿದ್ಯಾರ್ಥಿನಿಯರನ್ನೇ ದಬಾಯಿಸಿದ್ದಾರೆ.
ಇದರಿಂದ ಆಕ್ರೋಶಗೊಂಡ ನೂರಾರು ವಿದ್ಯಾರ್ಥಿನಿಯರು ಶುಕ್ರವಾರ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ಆಡಳಿತ ಮಂಡಳಿತ ವರ್ತನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದರು.
ಇದರಂತೆ ವಿದ್ಯಾರ್ಥಿನಿಯರ ಪ್ರತಿಭಟನೆ ಶನಿವಾರ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿನಿಯರ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು. ಅಲ್ಲದೆ, 1000 ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಇದೀಗ ಪ್ರಕರಣ ದಾಖಲಿಸಿದ್ದಾರೆ, ವಿಶ್ವವಿದ್ಯಾಲಯದ ಆವರಣದಲ್ಲಿ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos