ಅಮೆರಿಕ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: ಉಗ್ರರ ಪಾಲಿಗೆ ಸ್ವರ್ಗವಾಗಿರುವ ರಾಷ್ಟ್ರಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಭಾರತ ಮತ್ತು ಅಮೆರಿಕದ ರಕ್ಷಣಾ ಸಚಿವರು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಸರ್ಕಾರದ ಪ್ರತಿನಿಧಿಯೊಬ್ಬರು ಭಾರತಕ್ಕೆ ಆಗಮಿಸಿದ್ದು, ಅಮೆರಿಕದ ರಕ್ಷಣಾ ಸಚಿವ ಜೇಮ್ಸ್ ಮ್ಯಾಟಿಸ್ ಅವರನ್ನು ದೆಹಲಿಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಸ್ತ ಲಾಘವ ಮಾಡುವ ಮೂಲಕ ಸ್ವಾಗತಿಸಿದರು. ಇದೇ ವೇಳೆ ಭಾರತೀಯ ಸೇನೆಯ ಮೂರೂ ಪಡೆಗಳ ತುಕಡಿಗಳಿಂದ ಮ್ಯಾಟಿಸ್ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಬಳಿಕ ಎರಡೂ ದೇಶಗಳ ರಕ್ಷಣಾ ಸಹಕಾರಕ್ಕೆ ಸಂಬಂಧಿಸಿದಂತೆ ಸಾಂಸ್ಥಿಕ ಮಟ್ಟದ ವ್ಯವಸ್ಥೆ ಅಭಿವೃದ್ಧಿ, ಭಾರತಕ್ಕೆ ಅತ್ಯಾಧುನಿಕ ರಕ್ಷಣಾ ಸಲಕರಣೆ–ಸಾಮಗ್ರಿಗಳ ಮಾರಾಟ, ಅಫ್ಘಾನಿಸ್ತಾನಕ್ಕೆ ಸಂಬಂಧಿಸಿದಂತೆ ಅಮೆರಿಕದ ನೂತನ ನೀತಿ ಕುರಿತು, ಏಷ್ಯಾ ಮತ್ತು ಪೆಸಿಫಿಕ್ ವಲಯದಲ್ಲಿ ಚೀನಾದ ಇತ್ತೀಚಿನ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಬಳಿಕ ಉಭಯ ನಾಯಕರು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಉಗ್ರರ ಪಾಲಿಗೆ ಸ್ವರ್ಗವಾಗಿರುವ ರಾಷ್ಟ್ರಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಅಂತೆಯೇ ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಅಮೆರಿಕ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಅವರು, ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ನಾಯಕತ್ವ ಪ್ರಶಂಸಾರ್ಹವಾದದ್ದು. ಕಳೆದ ಹಲವು ವರ್ಷಗಳಿಂದ ಅಮೆರಿಕದೊಂದಿಗಿನ ಭಾರತದ ರಕ್ಷಣಾ ವ್ಯವಹಾರ ಗಣನೀಯ ಮಟ್ಟದಲ್ಲಿ ಅಭಿವೃದ್ಧಿ ಕಂಡಿದೆ. ಆಫ್ಘಾನಿಸ್ತಾನ ವಿಚಾರದಲ್ಲಿ ಭಾರತದ ಪಾತ್ರ ಪ್ರಮುಖವಾಗಿದ್ದು, ಆ ದೇಶದಲ್ಲಿ ಪ್ರಜಾಪ್ರಭುತ್ವ, ರಕ್ಷಣೆ ಮತ್ತು ಭದ್ರತೆ ವಿಚಾರದಲ್ಲಿ ಭಾರತದ ಸಹಕಾರ ಅತ್ಯಗತ್ಯ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos