ದೇಶ

ಕಾವೇರಿ ವಿವಾದ: ನಿರ್ವಹಣಾ ಮಂಡಳಿ ರಚನೆಗೆ ಆಗ್ರಹ, ಎಐಎಡಿಎಂಕೆ ಉಪವಾಸ ಸತ್ಯಾಗ್ರಹ ಆರಂಭ

Manjula VN
ಚೆನ್ನೈ: ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. 
ಇಂದು ಬೆಳಿಗ್ಗೆ ಮರೀನಾ ಬೀಚ್ ಸಮೀಪದ ಚೆಪುಕ್'ಗೆ ಆಗಮಿಸಿದ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದು, ಈ ಮೂಲಕ ಈಗಾಗಲೇ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿವೆ. 
ಕಾವೇರಿ ವಿವಾದ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೊಯಿಮತ್ತೂರಿನಲ್ಲಿ ವ್ಯಾಪಾರಿಗಳ ಸಂಘಟನೆ  ಬೆಂಬಲ ವ್ಯಕ್ತಪಡಿಸಿದ್ದು, ಮಾರುಕಟ್ಟೆಗಳನ್ನು ಬಂದ್ ಮಾಡಿವೆ. ಈ ನಡುವೆ ತಮಿಳುನಾಡು ರಾಜ್ಯಪಾಲ ಬರ್ವಾರಿಲಾಲ್ ಪುರೋಹಿತ್ ಅವರು ವಿವಾದ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. 

ಇನ್ನು ಕಾವೇರಿ ವಿವಾದ ಸಂಬಂಧ ಬಿಜೆಪಿ ವಿರುದ್ಧ ಹರಿಹಾಯ್ದಿರುವ ತಮಿಳುನಾಡಿನ ರಾಜಕೀಯ ನಾಯಕರು, ಕಾವೇರಿ ನಿರ್ವಹಣಾ ಮಂಡಳಿಗೆ ಕರ್ನಾಟಕ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಕರ್ನಾಟಕದ ಪರ ಎಂಬಂತೆ ವರ್ತಿಸುತ್ತಿದೆ ಎಂದು ಹೇಳಿದ್ದಾರೆ. 

6 ವಾರಗಳಳೊಗಾಗಿ ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯನ್ನು ರಚನೆ ಮಾಡುವಂತೆ ಕಳೆದ ಫೆ.16 ರಂದು ನಡೆಜ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ, ಆದೇಶ ಪಾಲಿಸದೇ ಸಮಿತಿ ರಚಿಸುವಲ್ಲಿ ವಿಫರವಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರಾಜ್ಯ ತೀವ್ರ ಪ್ರತಿಭಟನೆಗಳನ್ನು ನಡೆಸುತ್ತಿದೆ. 
SCROLL FOR NEXT