ಭಾರತ್ ಬಂದ್ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿರುವುದು
ಜೈಪುರ/ಭೋಪಾಲ್: ಎಸ್ಸಿ/ಎಸ್ಟಿ ಕಾಯಿದೆ ಮೇಲಿನ ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ರಾಜಸ್ಥಾನದಲ್ಲಿ ಮತ್ತೆ ಮಂಗಳವಾರ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು, ಸುಮಾರು 5 ಸಾವಿರ ಮಂದಿಯ ಗುಂಪು ಹಾಲಿ ಹಾಗೂ ಮಾಜಿ ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.
ಈ ಮಧ್ಯೆ, ನಿನ್ನೆ ನಡೆದ ಭಾರತ ಬಂದ್ ವೇಳೆ ಗಾಯಗೊಂಡಿದ್ದ ಇಬ್ಬರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಇಂದು ಮಧ್ಯಾಹ್ನ ರಾಜಸ್ಥಾನದ ಕರೌಲಿ ಜಿಲ್ಲೆಯ ಹಿಂದೂವಾನ್ ಪಟ್ಟಣದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ಮನೆಗೆ ಹಚ್ಚಿದ್ದು, ಜಿಲ್ಲೆಯಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾಲಿ ಶಾಸಕ ರಾಜ್ ಕುಮಾರಿ ಜಾಟ್ವ ಮತ್ತು ಮಾಜಿ ಶಾಸಕ ಭರೋಸಿಲಾಲ್ ಜಟ್ವಾ ಇಬ್ಬರು ದಲಿತರಾಗಿದ್ದು, ಅವರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಕರೌಲಿ ಜಿಲ್ಲಾಧಿಕಾರಿ ಅಭಿಮನ್ಯು ಕುಮಾರ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಸೋಮವಾರ ನಡೆದಿದ್ದ ಭಾರತ್ ಬಂದ್ ಹಿಂಸಾತ್ಮಕ ಪ್ರತಿಭಟನೆಯಲ್ಲಿ ದೇಶಾದ್ಯಂತ 10 ಮಂದಿ ಮೃತಪಟ್ಟಿದ್ದರು ಮತ್ತು ಪೊಲೀಸರು ಸೇರಿದಂತೆ 65 ಮಂದಿ ಗಾಯಗೊಂಡಿದ್ದರು.
ಕಳೆದ ಮಾರ್ಚ್ 20ರಂದು ಸರ್ವೋಚ್ಚ ನ್ಯಾಯಾಲಯ ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳಿಗೆ ತಮ್ಮ ಕರ್ತವ್ಯಗಳನ್ನು ನಿರ್ಭಯದಿಂದ ನಿರ್ವಹಿಸಲು ಮತ್ತು ಬ್ಲಾಕ್ ಮೇಲ್ಗೆ ಗುರಿಯಾಗುವುದನ್ನು ತಪ್ಪಿಸಲು ಎಸ್ಸಿ/ಎಸ್ಟಿ ಕಾಯಿದೆಯ ಕಾಠಿನ್ಯವನ್ನು ಕಡಿಮೆ ಮಾಡುವ ಆದೇಶವನ್ನು ಪ್ರಕಟಿಸಿತ್ತು. ಇದರಿಂದಾಗಿ ಎಸ್ಸಿ/ಎಸ್ಟಿ ಕಾಯಿದೆ ದುರ್ಬಲವಾಯಿತೆಂದು ಭಾವಿಸಿದ ದಲಿತರು ಭಾರತ್ ಬಂದ್ ಕರೆ ನೀಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos