ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
ಮುಂಬೈ; ತಮ್ಮನ್ನು ಜೈನ ಸಮುದಾಯಕ್ಕೆ ಸೇರಿದವರು ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ತಾವೊಬ್ಬ ವೈಷ್ಣವ ಹಿಂದೂ ಎಂದು ಹೇಳಿದ್ದಾರೆ.
ಬಿಜೆಪಿಯ 38ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ನಡೆದ ರ್ಯಾಲಿಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿರುವ ಅವರು, ಮೊದಲು ಸಿದ್ದರಾಮಯ್ಯ ಅವರು ಅಹಿಂದು ಹೌದೋ, ಅಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕು. ಜೈನ ಪ್ರತ್ಯೇಕ ಧರ್ಮ. ಅವರು ಹೇಗೆ ನನ್ನ ಬಗ್ಗೆ ಹಾಗೆಲ್ಲಾ ಮಾತನಾಡುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ನಾನು ಜೈನನಲ್ಲ. ನಾನು ಹಿಂದೂ ವೈಷ್ಣವ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಬಳಿಕ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ಪ್ರಸ್ತಾಪ ಸಲ್ಲಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರ ಹಿಂದುಗಳ ವಿಭಜನೆಯ ಉದ್ದೇಶ ಹೊಂದಿದೆ ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.
ಇದೇ ಶಿಫಾರಸನ್ನು 2013ರಲ್ಲಿ ಯುಪಿಎ ಸರ್ಕಾರ ತಿರಸ್ಕರಿಸಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸುವ ಏಕೈಕ ಉದ್ದೇಶದಿಂದ ಪ್ರಸ್ತುತ ನಿರ್ಧಾರ ಕೈಗೊಳ್ಳಲಾಗಿದೆ. ಇದೊಂದು ಚುನಾವಣಾ ತಂತ್ರ ಎಂದು ಹೇಳಿದ್ದಾರೆ.
ಈ ಹಿಂದೆ ಕರ್ನಾಟಕ ರಾಜ್ಯ ಪ್ರವಾಸದ ವೇಳೆ ಮಾತನಾಡಿದ್ದ ಅಮಿತ್ ಶಾ ಅವರು ಸಿದ್ದರಾಮಯ್ಯ ಅಹಿಂದ ನಾಯಕರಲ್ಲ, ಅವರು ಅಹಿಂದು ನಾಯಕ ಎಂದು ಹೇಳಿಕೆ ನೀಡಿದ್ದರು. ಆ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ ಅವರು, ಮೊದಲು ಶಾ ಅಹಿಂದುವೋ, ಅಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕು. ಅಮಿತ್ ಶಾ ಜೈನರು ಎಂದಿದ್ದರು.