ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮುಶ್ರಾ ವಾಗ್ದಂಡನೆಗೆ ವಿರೋಧ ಪಕ್ಷಗಳು ಸಲ್ಲಿಸಿದ್ದ ನಿಲುವಳಿ ನೋಟಿಸ್'ಗೆ ಸಬಂಧಿಸಿದಂತೆ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ತಜ್ಞರ ಜೊತೆಗೆ ಸಮಾಲೋಚನೆ ಪ್ರಕ್ರಿಯೆ ಆರಂಭಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಹೈದರಾಬಾದ್ ಪ್ರವಾಸವನ್ನು ಮೊಟಕುಗೊಳಿಸಿ, ರಾಜಧಾನಿಗೆ ಹಿಂದಿರುಗಿರುವ ನಾಯ್ಡು ಅವರು, ಕಾನೂನು ತಜ್ಞರು ಮತ್ತು ಸಂಸದೀಯ ವ್ಯವಹಾರಗಳಲ್ಲಿ ಅನುಭವ ಹೊಂದಿರುವವರ ಸಲಹೆ ಹಾಗೂ ಸೂಚನೆಗಳನ್ನು ಪಡೆದಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಮಾಜಿ ಅಟಾರ್ನಿ ಜನರಲ್ ಕೆ.ಪ್ರಸನ್ನ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ, ನಿವೃತ್ತ ಕಾನೂನು ಕಾರ್ಯದರ್ಶಿ ಪಿ.ಕೆ. ಮಲ್ಹೋತ್ರ, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಹಾಗೂ ಇತರರೊಂದಿಗೆ ಸಭಾಪತಿಗಳು ಈಗಾಗಲೇ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ವಾಗ್ದಂಡನೆಗೆ ಅನುಮತಿ ನೀಡುವಂತೆ ಕೋರಿ ಗುಲಾಂ ನಬಿ ಆಜಾದ್ ನೇತೃತ್ವದ ವಿರೋಧ ಪಕ್ಷಗಳ ನಿಯೋಗ ಇತ್ತೀಚೆಗಷ್ಟೇ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.
ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ 5 ಆರೋಪ ಹೊರಿಸಿದ್ದ ವಿರೋಧ ಪಕ್ಷಗಳು, ಅವರ ವಿರುದ್ಧ ದುರ್ನಡತೆ ಹಾಗೂ ಅಧಿಕಾರ ದುರ್ಬಳಕೆ ಆರೋಪ ಹೊರಿಸಿತ್ತು. ಇದರೊಂದಿಗೆ ನ್ಯಾಯಾಂಗ ಮತ್ತು ರಾಜಕೀಯ ಪಕ್ಷಗಳ ನಡುವೆ ಇದೇ ಮೊದಲ ಬಾರಿಗೆ ಕಂಡು ಕೇಳರಿಯದ ಸಂಘರ್ಷ ತಲೆದೋರುವ ಸಾಧ್ಯತೆಗಳು ಕಂಡು ಬರುತ್ತಿವೆ.
ಗ್ಯಾಂಗ್ ಸ್ಟರ್ ಸೊಹ್ರಾಬುದ್ದೀನ್ ಶೇಖ್ ಅನುಮಾನಾಸ್ಪದ ಎನ್ ಕೌಂಟರ್ ಪ್ರಕರಣದ ನ್ಯಾಯಾಧೀಶ ಬಿ.ಹೆಚ್. ಲೋಯಾ ಸಾವಿನ ತನಿಖೆಗೆ ಆದೇಶಿಸಲು ದೀಪಕ್ ಮಿಶ್ರಾ ನಿರಾಕರಿಸಿದ ಹಿನ್ನಲೆಯಲ್ಲಿ ವಾಗ್ದಂಡನೆಗೆ ಕಾಂಗ್ರೆಸ್ ಮುಂದಾಗಿತ್ತು.
ನ್ಯಾಯಾಧೀಶರೊಬ್ಬರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆಂದು ಸಂಸದರಿಗೆ ಎನಿಸಿದರೆ ಅವರ ವಿರುದ್ಧ ಮಹಾಭಿಯೋಗ ನಡೆಸಲು ನಿಲುವಳಿ ಮಂಡಿಸಬಹುದಾಗಿದೆ.
ಇದರಲ್ಲಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರೂ ಬರುತ್ತಾರೆ. ಸಂವಿಧಾನದ 124 (4)ನೇ ಪರಿಚ್ಛೇದದ ಪ್ರಕಾರ ಸಂಸತ್ತಿನ ಉಭಯ ಸದನಗಳ ಅಂಗೀಕಾರದ ಬಳಿಕ, ಕೊನೆಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನು ವಜಾ ಮಾಡುವ ಅಧಿಕಾರ ರಾಷ್ಟ್ರಪತಿಗಳಿಗೆ ಮಾತ್ರ ಇರುತ್ತದೆ ಇದಕ್ಕೆ ಮಹಾಭಿಯೋಗ (ವಾಗ್ದಂಡನೆ) ಪ್ರಕ್ರಿಯೆ ಎಂದು ಕರೆಯಲಾಗುತ್ತದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos