ನವದೆಹಲಿ: ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ನಾನು ಖಂಡಿತ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ಭಾರತೀಯ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಹೇಳಿದ್ದಾರೆ.
ಭಾರತದ ಕ್ರಿಕೆಟ್ ದಂತಕಥೆಗಳಾದ ಕಪಿಲ್ ದೇವ್, ಸುನಿಲ್ ಗವಾಸ್ಕರ್, ನವಜೋತ್ ಸಿಂಗ್ ಮತ್ತು ನಟ ಅಮೀರ್ ಖಾನ್ ಅವರಿಗೆ ಪಿಟಿಐ ಪಕ್ಷದ ಪ್ರಧಾನಿ ಅಭ್ಯರ್ಥಿ ಇಮ್ರಾನ್ ಖಾನ್ ಅಹ್ವಾನ ನೀಡಿದ್ದು. ಈ ಆಹ್ವಾನದ ಕುರಿತು ಪ್ರತಿಕ್ರಿಯಿಸಿರುವ ಕಪಿಲ್ ದೇವ್ ಅವರು, ಖಂಡಿತಾ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.
ಸುದ್ದಿಸಂಸ್ಥೆಯೊಂದಿಗೆ ಈ ಕುರಿತು ಮಾತನಾಡಿದ ಕಪಿಲ್ ದೇವ್ ಅವರು, ನನಗೆ ಈ ವರೆಗೂ ಯಾವುದೇ ರೀತಿಯ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ಇಮ್ರಾನ್ ಖಾನ್ ನಮ್ಮನ್ನು ಆಹ್ವಾನಿಸಿದ್ದರೆ ಖಂಜಿತಾ ನಾವು ಪಾಕಿಸ್ತಾನಕ್ಕೆ ತೆರಳಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಕ್ರಿಕೆಟಿಗ ಮತ್ತು ಹಾಲಿ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ತಾವೂ ಕೂಡ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳುವುದಾಗಿ ತಿಳಿಸಿದ್ದರು.
ಇನ್ನು ಇದೇ ಆಗಸ್ಟ್ 11ರಂದು ಇಮ್ರಾನ್ ಖಾನ್ ಪ್ರಮಾಣ ವಚನಕ್ಕೆ ದಿನಾಂಕ ನಿಗದಿ ಪಡಿಸಿದ್ದು, ಸರಳವಾಗಿ ಕಾರ್ಯಕ್ರಮ ಆಯೋಜನೆಗೆ ನಿರ್ಧರಿಸಲಾಗಿದೆ. ಈ ಹಿನ್ನಲೆಯಲ್ಲಿ ಪ್ರಮಾಣವಚನ ಕಾರ್ಯಕ್ರಮವನ್ನು ಪಾಕಿಸ್ತಾನ ಅಧ್ಯಕ್ಷರ ಅಧಿಕೃತ ನಿವಾಸ ಐವಾನ್ ಇ ಸದರ್ ಭವನದಲ್ಲಿ ಆಯೋಜಿಸಲಾಗಿದೆ. ಇನ್ನು ಕಾರ್ಯಕ್ರಮಕ್ಕೆ ಯಾವುದೇ ವಿದೇಶಿ ನಾಯಕರಿಗೆ ಅಹ್ವಾನ ನೀಡಿಲ್ಲ ಎಂದು ಪಾಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ.