ನವದೆಹಲಿ: ಎನ್ಆರ್ ಸಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ನಿಲುವಿನಿಂದ ಕಾಂಗ್ರೆಸ್ ಯೂಟರ್ನ್ ಹೊಡೆದಿದ್ದು, ಎನ್ಆರ್ ಸಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.
ಪ್ರಮುಖವಾಗಿ ಅಸ್ಸಾಂ ನ ಅಕ್ರಮ ಬಾಂಗ್ಲಾ ವಲಸಿಗರಿಂದ ಮೂಲ ಅಸ್ಸಾಂ ನಿವಾಸಿಗರಿಗೆ ತೊಂದರೆಯಾಗುತ್ತಿದೆ ಎಂಬ ಭಾವನೆ ಆ ರಾಜ್ಯದಲ್ಲಿ ಬಲವಾಗಿ ನೆಲೆಯೂರಿದ್ದು, ಇದೇ ಕಾರಣಕ್ಕೆ ಇದೀಗ ಕಾಂಗ್ರೆಸ್ ಪಕ್ಷ ಕೂಡ ತನ್ನ ನಿಲುವು ಬದಲಿಸಿದೆ ಎನ್ನಲಾಗಿದೆ.
ಅಸ್ಸಾಂ ಕಾಂಗ್ರೆಸ್ ಘಟಕದ ನಾಯಕರು ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಕಾಂಗ್ರೆಸ್ ತನ್ನ ನಿಲುವು ಬದಲಿಸದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂಬ ಎಚ್ಚರಿಕೆಯನ್ನೂ ಅಸ್ಸಾಂ ನಾಯಕರು ನೀಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಎನ್ಆರ್ ಸಿಯನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸಿದೆ.
ಇನ್ನು ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂನಬಿ ಆಜಾದ್ ಅವರು, ನಿಷ್ಠಾವಂತ ಭಾರತೀಯರನ್ನು ಯಾವುದೇ ಕಾರಣಕ್ಕೂ ಭಾರತದಿಂದ ಹೊರಗಿಡಬಾರದು ಎಂಬುದು ಕಾಂಗ್ರೆಸ್ ನಿಲುವಾಗಿದ್ದು, ಯಾವುದೇ ಕಾರಣಕ್ಕೂ ಎನ್ ಆರ್ ಸಿ ವಿಚಾರದಲ್ಲಿ ರಾಜಕೀಯ ಬೇಡ. ಎನ್ಆರ್ ಸಿಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಆದರೆ ಅಂತಿಮ ಪಟ್ಟಿ ಬಿಡುಗಡೆ ಸಂದರ್ಭದಲ್ಲಾಗುವ ವೈಪರೀತ್ಯಗಳ ಕುರಿತು ಕಟ್ಟೆಚ್ಚರ ವಹಿಸಬೇಕು ಎಂದು ಅವರು ರಾಜ್ಯಸಭೆಯಲ್ಲಿ ಹೇಳಿದರು.