ನವದೆಹಲಿ: ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ತ್ರಿವಳಿ ತಲಾಖ್ ಮಸೂದೆ ಈ ಬಾರಿ ರಾಜ್ಯಸಭೆಯಲ್ಲಿ ಮಂಡನೆಯಾಗುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದ್ದು, ಒಮ್ಮತ ಮೂಡದ ಹಿನ್ನೆಲೆಯಲ್ಲಿ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆ ಇಂದು ಮಂಡೆನೆಯಾಗುತ್ತಿಲ್ಲ ಎಂದು ರಾಜ್ಯಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಶುಕ್ರವಾರ ಹೇಳಿದ್ದಾರೆ.
ನಿನ್ನೆಯಷ್ಟೇ ಪತ್ನಿಯವರಿಗೆ ತ್ರಿವಳಿ ತಲಾಖ್ ನೀಡುವ ಗಂಡನಿಗೆ ಜಾಮೀನು ಪಡೆಯುವ ಅವಕಾಶವೀರುವ ತಿದ್ದುಪಡಿಗೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಈ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗಬೇಕಿತ್ತು. ಆದರೆ ಮಂಡನೆಯಾಗದೆ ಚಳಿಗಾಲದ ಅಧಿವೇಶನಕ್ಕೆ ಮುಂದೂಡಿಕೆಯಾಗಿದೆ.
ಇನ್ನು ವರದಿಗಳ ಪ್ರಕಾರ, ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಈ ಬಾರಿಯೂ ತ್ರಿವಳಿ ತಲಾಖ್ ಗೆ ವಿರೋಧ ವ್ಯಕ್ತಪಡಿಸಿದ್ದು. ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆಯನ್ನು ಕಳೆದ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಅಂಗೀಕರಿಸಿದೆ. ಆದರೆ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು ಮತ್ತು ತಿದ್ದುಪಡಿಗೆ ಆಗ್ರಹಿಸಿದ್ದವು. ಈ ಹಿನ್ನೆಲೆಯಲ್ಲಿ ತ್ರಿವಳಿ ತಲಾಖ್ ಜಾಮೀನು ರಹಿತವಾಗಿದ್ದರೂ ಮ್ಯಾಜಿಸ್ಟ್ರೇಟ್ ರಿಂದ ಜಾಮೀನು ಪಡೆಯಲು ತಿದ್ದುಪಡಿ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ.
ಮೂರು ಸಲ ತಲಾಖ್ ಎಂದು ಹೇಳಿ ವಿಚ್ಛೇದನ ನೀಡುವ ಮುಸ್ಲಿಂ ವ್ಯಕ್ತಿಗೆ ಮೂರು ವರ್ಷದ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವ ಸಹ ಈ ಮಸೂದೆಯಲ್ಲಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos