ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಹಾಗೂ 11 ಆಪ್ ಶಾಸಕರ ವಿರುದ್ಧ ದೆಹಲಿ ಪೊಲೀಸರು ಸೋಮವಾರ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ದೆಹಲಿ ಸಿಎಂ, ಡಿಸಿಎಂ ಹಾಗೂ ಶಾಸಕರಾದ ಅಮಾನತುಲ್ಲಾ ಖಾನ್, ಪ್ರಕಾಶ್ ಜರ್ವಾಲ್, ನಿತಿನ್ ತ್ಯಾಗಿ, ರಿತುರಾಜ್ ಗೋವಿಂದ್, ಸಂಜೀವ್ ಜಾ, ಅಜಯ್ ದತ್, ರಾಜೇಶ್ ರಿಶಿ, ರಾಜೇಶ್ ಗುಪ್ತಾ, ಮದನ್ ಲಾಲ್, ಪ್ರವೀಣ್ ಕುಮಾರ್ ಮತ್ತು ದಿನೇಶ್ ಮೋಹಿನಿಯಾ ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.
ಅಂತಿಮ ಚಾರ್ಜ್ ಶೀಟ್ ಅನ್ನು ಹೆಚ್ಚುವರಿ ಮುಖ್ಯ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರಿಗೆ ಸಲ್ಲಿಸಲಾಗಿದ್ದು, ಅವರು 25ಕ್ಕೆ ವಿಚಾರಣೆ ನಿಗದಿ ಮಾಡಿದ್ದಾರೆ.
ಫೆ.19ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಭೆ ನಡೆಯುತ್ತಿದ್ದ ವೇಳೆ ತಮ್ಮ ಮೇಲೆ ಆಪ್ ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮುಖ್ಯ ಕಾರ್ಯದರ್ಶಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.