ನವದೆಹಲಿ: 2019ರ ಲೋಕಸಭೆ ಚುನಾವಣೆ ಜೊತೆಗೆ 11 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಹಿಂದೇಟು ಹಾಕಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚುನಾವಣಾ ಆಯೋಗಕ್ಕೆ ಈ ಸಂಬಂಧ ಪತ್ರ ಬರೆದಿದ್ದರು. ಈ ಕುರಿತು ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಓಪಿ ರಾವತ್ ಅವರು, ಒಂದೇ ಬಾರಿಗೆ ಲೋಕಸಭೆ ಹಾಗೂ 11 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸಲು ಸಾಧ್ಯವಿಲ್ಲ. ಕಾರಣ ನಮ್ಮ ಬಳಿ ಅಷ್ಟು ವಿವಿ ಪ್ಯಾಟ್ ಗಳು ಇಲ್ಲ ಎಂದು ಹೇಳಿದ್ದಾರೆ.
ಸದ್ಯಕ್ಕೆ ವಿವಿ ಪ್ಯಾಟ್ ಯಂತ್ರಗಳ ಕೊರತೆ ಇರುವುದರಿಂದ ಒಂದೆರಡು ತಿಂಗಳಲ್ಲಿ ಹೆಚ್ಚಿನ ವಿವಿ ಪ್ಯಾಟ್ ಯಂತ್ರಗಳನ್ನು ಖರೀದಿಸುವ ನಿರ್ಧಾರವನ್ನು ತೆಗೆದುಕೊಂಡರೆ ಆಗ ಒಂದೇ ಕಾಲಕ್ಕೆ ಚುನಾವಣೆ ನಡೆಸಲು ಸಾಧ್ಯವಾಗುತ್ತದೆ ಎಂದು ಓಪಿ ರಾವತ್ ಅವರು ಹೇಳಿದ್ದಾರೆ.
ಲೋಕಸಭೆ ಚುನಾವಣೆ ಅವಧಿಗೂ ಮುನ್ನವೇ ಆಗುವ ಸಾಧ್ಯತೆಗಳು ಕಡಿಮೆ. ಚುನಾವಣಾ ಆಯೋಗ ಸಹ ಏಪ್ರಿಲ್-ಮೇ ತಿಂಗಳಿನಲ್ಲಿಯೇ ಲೋಕಸಭಾ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಆದರೆ ಈ ವರ್ಷದ ಡಿಸೆಂಬರ್ ತಿಂಗಳಿನಿಂದ 2019ರ ಸೆಪ್ಟೆಂಬರ್ ವರೆಗೆ ಚುನಾವಣೆ ಎದುರಿಸಲಿರುವ ವಿವಿಧ ರಾಜ್ಯಗಳ ಚುನಾವಣೆಯನ್ನು ಲೋಕಸಭಾ ಚುನಾವಣೆಗೆ ಹೊಂದಿಕೆಯಾಗುವಂತೆ ಆಯೋಜಿಸುವುದು ಬಿಜೆಪಿಯ ಉದ್ದೇಶವಾಗಿದೆ.
ರಾಜಸ್ಥಾನ, ಮಧ್ಯಪ್ರದೇಶ ವಿಧಾನಸಭೆಯ ಕಾಲಾವಧಿ 2019ರ ಜನವರಿಯಲ್ಲಿ ಅಂತ್ಯವಾಗಲಿದೆ. ಅಂದರೆ ಜನವರಿಗೂ ಮುನ್ನವೇ ಈ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ. ನಂತರ ಏಪ್ರಿಲ್-ಮೇ ತಿಂಗಳಿನಲ್ಲಿ ಆಂಧ್ರಪ್ರದೇಶ, ಒಡಿಶಾ ಮತ್ತು ತೆಲಂಗಾಣಗಳು ಚುನಾವಣೆ ಎದುರಿಸಲಿವೆ.
ಇನ್ನು ಮಹಾರಾಷ್ಟ್ರ, ಹರ್ಯಾಣ, ಜಾರ್ಖಂಡ್ ಮತ್ತು ಮಿಜೋರಾಂಗಳು ವಿಧಾನಸಭೆಯ ಅವಧಿ ಸೆಪ್ಟೆಂಬರ್ ನಿಂದ ಡಿಸೆಂಬರ್ ಅವಧಿಯಲ್ಲಿ ಮುಕ್ತಾಯವಾಗಲಿದ್ದು ಈ ರಾಜ್ಯಗಳ ಚುನಾವಣೆಯನ್ನು ಅವಧಿಗೂ ಮುನ್ನ ಅಂದರೆ ಲೋಕಸಭಾ ಚುನಾವಣೆಯ ಸಮಯದಲ್ಲಿ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಜೊತೆಗೆ ಬಿಹಾರದಲ್ಲಿ ಅವಧಿಗೂ ಮುನ್ನವೇ ಚುನಾವಣೆ ಮಾಡುವುದರಿಂದ ಸಿಎಂ ನಿತೀಶ್ ಕುಮಾರ್ ಅವರಿಗೇ ಲಾಭವೆನ್ನಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಒಂದು ರಾಷ್ಟ್ರ ಒಂದು ಚುನಾವಣೆ ಎಂಬ ಪರಿಕಲ್ಪನೆ ಅಡಿಯಲ್ಲಿ ಅಮಿತ್ ಶಾ ಅವರು ಆಯೋಗಕ್ಕೆ ಪತ್ರ ಬರೆದಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos