ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ 'ಅಸ್ತಿ ಕಳಶ' ನೀಡಿದ ಬಿಜೆಪಿ ನಾಯಕರು
ನವದೆಹಲಿ: ದೇಶದ ಪ್ರಮುಖ ನದಿಗಳಲ್ಲಿ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಅಸ್ತಿಯನ್ನು ವಿಸರ್ಜನೆ ಮಾಡಲು ಬಿಜೆಪಿ ನಿರ್ಧರಿಸಿದ್ದು, ಇದರಂತೆ ಎಲ್ಲಾ ರಾಜ್ಯದ ಬಿಜೆಪಿ ಮುಖ್ಯಸ್ಥರಿಗೆ ವಾಜಪೇಯಿಯವರ ಚಿತಾಭಸ್ಮವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬುಧವಾರ ನೀಡಿದರು.
ವಾಜಪೇಯಿಯವರಿಗೆ ಗೌರವ ಸಲ್ಲಿಸಲು ಬಿಜೆಪಿ ಕಾರ್ಯಕರ್ತರು ಹಾಗೂ ಜನರು ಇಚ್ಛಿಸುತ್ತಿರುವ ಹಿನ್ನಲೆಯಲ್ಲಿ ವಾಜಪೇಯಿಯವರ ಅಸ್ತಿಯನ್ನು ದೇಶದ ಪ್ರಮುಖ ನದಿಗಳಲ್ಲಿ ವಿಸರ್ಜನೆ ಮಾಡಲು ನಿರ್ಧರಿಸಿರುವ ಬಿಜೆಪಿ, ಇದೇ ವೇಳೆ ಅಸ್ತಿ ಕಳಶ ಯಾತ್ರೆ ನಡೆಸಲು ನಿರ್ಧರಿಸಿದೆ.
ಇದರಂತೆ ಇಂದು ಬಿಜೆಪಿ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲಾ ರಾಜ್ಯದ ಬಿಜೆಪಿ ಮುಖ್ಯಸ್ಥರಿಗೆ ಅಸ್ತಿ ಕಳಶವನ್ನು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ವಾಜಪೇಯಿಯವರ ಕುಟುಂಬಸ್ಥರು ಹಾಜರಿದ್ದರು.