ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ಮುಜಾಫರ್ ನಗರ: ದೇಶದ ವರ್ಚಸ್ಸಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಶನಿವಾರ ಮಾನನಷ್ಟ ಮೊಕದ್ದಮೆ ಪ್ರಕರಣವೊಂದು ದಾಖಲಾಗಿದೆ.
ಸುಧೀರ್ ಕುಮಾರ್ ಓಝಾ ಎಂಬುವವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲು ಮಾಡಿದ್ದು, ಪ್ರಕರಣ ಸಂಬಂಧ ಸೆಪ್ಟೆಂಬರ್ 4 ರಂದು ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.
ವಿದೇಶಕ್ಕೆ ತೆರಳಿದ್ದ ರಾಹುಲ್ ಗಾಂಧಿಯವರು ದೇಶದ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ. ಭಯೋತ್ಪಾದನೆಯನ್ನು ಸಮರ್ಥಿಸಿಕೊಂಡಿರುವ ಅವರು, ದೇಶದಲ್ಲಿ ನಿರುದ್ಯೋಗ ಸಮಸ್ಯೆಯಿರುವ ಕಾರಣ ಇಸಿಸ್ ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಹೇಳಿದ್ದಾರೆ. ಇದು ದೇಶಕ್ಕೆ ಮಾಡಿದ ಅಪಮಾನವಾಗಿದೆ ಎಂದು ದೂರಿನಲ್ಲಿ ಸುಧೀರ್ ಅವರು ಹೇಳಿದ್ದಾರೆ.
ಜರ್ಮನಿ ಹಾಗೂ ಬ್ರಿಟನ್ ರಾಷ್ಟ್ರಗಳಿಗೆ ಭೇಟಿ ನೀಡಿದ್ದ ರಾಹುಲ್ ಅವರು, ದೇಶದಲ್ಲಿ ನಿರುದ್ಯೋಗ ಸಮಸ್ಯೆಯಿರುವುದರಿಂದ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗಿವೆ ಎಂದು ಹೇಳಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಭಾರತೀಯ ಸಂಸ್ಕೃತಿಗಳೇ ಕಾರಣ ಎಂದು ಹೇಳುವ ಮೂಲಕ ವಿದೇಶಿ ಮಣ್ಣಿನಲ್ಲಿ ಭಾರತದ ವರ್ಚಸ್ಸು ಹಾಳಾಗುವಂತೆ ಮಾಡಿದ್ದಾರೆ.
ರಾಹುಲ್ ಗಾಂಧಿಯವರು ಉದ್ದೇಶಪೂರ್ವಕವಾಗಿ ಈ ರೀತಿಯ ಹೇಳಿಕೆಗಳನ್ನು ನೀಡಿದ್ದು, ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಅವರ ಹೇಳಿಕೆಗಳಿಂದ ದೇಶದಲ್ಲಿ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿವೆ. ಕಾಂಗ್ರೆಸ್ ನಾಯಕನ ಈ ಹೇಳಿಕೆಗಳಿಂದ ನನಗೆ ಬಹಳ ನೋವಾಗಿದೆ ಎಂದು ದೂರಿನಲ್ಲಿ ಹೇಳಿರುವ ಸುಧೀರ್ ಅವರು, ರಾಹುಲ್ ವಿರುದ್ಧ ಐಪಿಸಿ ಸೆಕ್ಷನ್ 153 ಬಿ (ರಾಷ್ಟ್ರೀಯ ಸಮಗ್ರತೆಗೆ ಪೂರ್ವಗ್ರಹ ಸಮರ್ಥನೆಗಳು), 500 (ಮಾನನಷ್ಟ), 504 (ಜನರನ್ನು ಪ್ರಚೋದಿಸಲು ಅವಮಾನ ಮಾಡುವುದು)ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದಲ್ಲಿ ರಾಹುಲ್ ಅವರು ದೋಷಿಯೆಂದು ಸಾಬೀತಾಗಿದ್ದೇ ಆದರೆ, ದಂಡ ಅಥವಾ ಕನಿಷ್ಟ 2-3 ವರ್ಷ ಜೈಲು ಶಿಕ್ಷೆ ಅಥವಾ ದಂಡದ ಜೊತೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos