ದೇಶ

ಸಂವಿಧಾನದಲ್ಲಿ ತಿದ್ದುಪಡಿ ತರದ ಹೊರತು ಒಂದು ದೇಶ ಒಂದು ಚುನಾವಣೆ ಸಾಧ್ಯವಿಲ್ಲ: ಚುನಾವಣಾ ಆಯೋಗ

Srinivasamurthy VN
ನವದೆಹಲಿ: ಬಹು ಉದ್ದೇಶಿತ ಒಂದು ದೇಶ ಒಂದು ಚುನಾವಣೆ ಪ್ರಸ್ತುತ ಅಸಾಧ್ಯ ಎಂದು ಕೇಂದ್ರ ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಓಂ ಪ್ರಕಾಶ್ ರಾವತ್ ಅವರು, ಸದ್ಯದ ಮಟ್ಟಿಗೆ ಒಂದು ದೇಶ ಮತ್ತು ಒಂದು ಚುನಾವಣೆ ಜಾರಿ ಅಥವಾ ಅನುಷ್ಠಾನ ಕಷ್ಟಸಾಧ್ಯ. ಇದಕ್ಕಾಗಿ ಸಂವಿಧಾನದಲ್ಲಿ ತಿದ್ದುಪಡಿ ತರಬೇಕು. ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಈ ತಿದ್ದುಪಡಿಗೆ ಅನುಮೋದನೆ ನೀಡಿ ಜಾರಿಗೊಳಿಸಿದರೆ ಮಾತ್ರ ಒಂದು ದೇಶ ಒಂದು ಚುನಾವಣೆ ಪರಿಕಲ್ಪನೆ ಸಾಧ್ಯವಾಗುತ್ತದೆ ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ.
ಇನ್ನು ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಒಂದು ದೇಶ ಒಂದು ಚುನಾವಣೆ ಅಂದರೆ ಏಕಕಾಲದಲ್ಲೇ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವ ಪರಿಕಲ್ಪನೆಗೆ ಈ ಹಿಂದೆ ಹಲವು ಸ್ಥಳೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದವು. ಆದರೆ ದೇಶದ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಈ ಬಗ್ಗೆ ನಿಲುವು ಸ್ಪಷ್ಟಪಡಿಸಿರಲಿಲ್ಲ. ಇತ್ತೀಚೆಗೆ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭೇಟಿ ಬಳಿಕ ಒಂದು ದೇಶ ಒಂದು ಚುನಾವಣೆಗೆ ತಮ್ಮದೇನೂ ತಕರಾರಿಲ್ಲ ಎಂದು ಹೇಳುವ ಮೂಲಕ ಪರೋಕ್ಷ ಒಪ್ಪಿಗೆ ಸೂಚಿಸಿದ್ದರು.
ಆದರೆ ಕಾಂಗ್ರೆಸ್ ಮತ್ತು ಟಿಎಂಸಿ ಪಕ್ಷಗಳು ಮಾತ್ರ ಇದಕ್ಕೆ ತಮ್ಮ ವಿರೋಧ ಮುಂದುವರೆಸಿವೆ.
SCROLL FOR NEXT