ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನವೊಂದು 20 ಸೆಕೆಂಡ್ ತಡವಾಗಿದ್ದರೆ ಪತನಗೊಂಡು ಭಾರೀ ಅನಾಹುತವೊಂದು ಸಂಭವಿಸುತ್ತಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ನಾಗರೀಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬಹಿರಂಗಪಡಿಸಿದೆ.
ಈ ಕುರಿತಂತೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ರಾಹುಲ್ ಗಾಂಧಿಯವರು ಕರ್ನಾಟಕ ವಿಧಾನಸಬೆ ಚುನಾವಣೆ ಪ್ರಚಾರದ ವೇಳೆ ರಾಜಧಾನಿ ದೆಹಲಿಯಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ವಿಮಾನ ಕೇವಲ 20 ಸೆಕೆಂಡ್ ಗಳ ಅಂತರದಿಂದ ಪತನಗೊಳ್ಳುವುದರಿಂದ ಪಾರಾಗಿತ್ತು ಎಂದು ಡಿಜಿಸಿಎ ವರದಿಯಲ್ಲಿ ತಿಳಿಸಿದೆ ಎಂದು ತಿಳಿಸಿದೆ.
ರಾಹುಲ್ ಅವರು ಏಪ್ರಿಲ್ 26 ರಂದು ಹುಳ್ಳಿಗೆ ಪ್ರಯಾಣಿಸುತ್ತಿದ್ದ ಬಾಡಿಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ರಾಹುಲ್ ಅವರು ಅಪಾಯದಿಂದ ಪಾರಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ನಾಗರೀಕ ವಿಮಾನಯಾನ ನಿರ್ದೇಶನಾಲಯವು ಇಬ್ಬರು ಸದಸ್ಯರ ಸಮಿತಿಯಿಂದ ತನಿಖೆಗೆ ಆದೇಶಿಸಿತ್ತು.
ತನಿಖೆ ನಡೆಸಿದ್ದ ಸಮಿತಿಯು ಹಾರಾಟದ ವೇಳೆ ವಿಮಾನದಲ್ಲಿ ಉಂಟಾದ ತಾಂತ್ರಿಕ ದೋಷಕ್ಕೆ ಕಾರಣಗಳೇನು ಎಂಬುದರ ವಿವರವನ್ನು ಸಲ್ಲಿಸಿದೆ. ವರದಿಯಲ್ಲಿ ವಿಮಾದ ಆಟೋ ಪೈಲಟ್ ಮೋಡ್ ನಲ್ಲಿತ್ತು. ಇದರ ಅರಿವಿಲ್ಲದ ಸಿಬ್ಬಂದಿ ವಿಮಾನವನ್ನು ನಿಯಂತ್ರಣಕ್ಕೆ ತರಲು ಸ್ವಲ್ಪ ಸಮಯ ತೆಗೆದುಕೊಂಡರು. ತಾಂತ್ರಿಕ ದೋಷವನ್ನು ಪತ್ತೆ ಮಾಡಿ ಅದನ್ನು ಸರಿಪಡಿಸಲು ವಿಮಾನ ಸಿಬ್ಬಂದಿ 20 ಸೆಕೆಂಡ್ ತಡ ಮಾಡಿದ್ದರೂ ವಿಮಾನ ಪತನಗೊಳ್ಳುತ್ತಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos