ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಕುರಿಯನ್ ಜೋಸೆಫ್ 
ದೇಶ

ಹೊರಗಿನಿಂದ ಯಾರೋ ಅಂದಿನ ಸಿಜೆಐ ದೀಪಕ್ ಮಿಶ್ರಾರನ್ನು ನಿಯಂತ್ರಿಸುತ್ತಿದ್ದರು: ಕುರಿಯನ್ ಜೋಸೆಫ್

ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಬಾಹ್ಯ ಶಕ್ತಿ ನಿಯಂತ್ರಿಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶ...

ನವದೆಹಲಿ: ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಬಾಹ್ಯ ಶಕ್ತಿ ನಿಯಂತ್ರಿಸುತ್ತಿದ್ದರು ಎಂದು ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಆರೋಪಿಸಿದ್ದಾರೆ.

ಕಳೆದ ಜನವರಿಯಲ್ಲಿ ಜಸ್ಟೀಸ್ ಕುರಿಯನ್ ಸೇರಿದಂತೆ ಇಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹಾಗೂ ಇತರ ಇಬ್ಬರು ಹಿರಿಯ ನ್ಯಾಯಾಧೀಶರು ಸುದ್ದಿಗೋಷ್ಠಿ ನಡೆಸಿ ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಕಾರ್ಯವೈಖರಿಗೆ ವಿರೋಧ ವ್ಯಕ್ತಪಡಿಸಿದ್ದರು. ಅಂದು ಅದು ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯಾಧೀಶರು ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಬಹಿರಂಗವಾಗಿ ಸುದ್ದಿ ಗೋಷ್ಠಿ ನಡೆಸಿ ಹೇಳಿಕೆ ನೀಡುವ ಮೂಲಕ ದೇಶದ ಸುಪ್ರೀಂ ನ್ಯಾಯ ವ್ಯವಸ್ಥೆಯೊಳಗೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಈ ಪ್ರಕರಣ ತೋರಿಸಿತ್ತು.

ಇದೀಗ ಇಂಗ್ಲಿಷ್ ದೈನಿಕವೊಂದಕ್ಕೆ ಸಂದರ್ಶನ ನೀಡಿರುವ ಕುರಿಯನ್ ಜೋಸೆಫ್, ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣಗಳ ಇತ್ಯರ್ಥ ವಿಲೇವಾರಿಗೆ ನ್ಯಾಯಪೀಠಗಳಿಗೆ ಹಂಚಿಕೆ ಮಾಡುವುದು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಗಳಿಗೆ ನ್ಯಾಯಾಧೀಶರ ನೇಮಕ ವಿಚಾರಗಳಲ್ಲಿ ಬಾಹ್ಯ ಶಕ್ತಿಗಳು ಪ್ರಭಾವ ಬೀರುವುದಲ್ಲದೆ ನಿಯಂತ್ರಿಸುತ್ತಿದ್ದವು ಎಂದು ಆರೋಪಿಸಿದ್ದಾರೆ.

ಜನವರಿಯಲ್ಲಿ ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಇಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿ ಎಂ ಬಿ ಲೋಕೂರ್, ಮಾಜಿ ನ್ಯಾಯಾಧೀಶ ಜೆ ಚೆಲಮೇಶ್ವರ, ಕುರಿಯನ್ ಜೋಸೆಫ್ ಇದ್ದರು, ಅಂದು ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗಳಲ್ಲಿ ಲೋಪದೋಷವಾಗುತ್ತಿದೆ, ಉನ್ನತ ನ್ಯಾಯಾಲಯದಲ್ಲಿ ಪ್ರಕರಣಗಳ ವಿಚಾರಣೆ ಹಂಚಿಕೆಯಲ್ಲಿ ಪಕ್ಷಪಾತ ಧೋರಣೆ ತಳೆಯಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಜಸ್ಟೀಸ್ ಜೋಸೆಫ್ ಕುರಿಯನ್ ಕಳೆದ ತಿಂಗಳು 30ರಂದು ನಿವೃತ್ತಿ ಹೊಂದಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ತಮ್ಮ ಅಧಿಕೃತ ನಿವಾಸದಲ್ಲಿ ಅನೌಪಚಾರಿಕವಾಗಿ ಮಾತನಾಡಿದ್ದ ಸಂದರ್ಭದಲ್ಲಿ, ಅಂದು ಪತ್ರಿಕಾಗೋಷ್ಠಿ ನಡೆಸಿದ್ದಕ್ಕೆ ಯಾವುದೇ ವಿಷಾದಗಳಿಲ್ಲ. ನಾವು ಆಕ್ಷೇಪವೆತ್ತಿದ ನಂತರ ಸುಪ್ರೀಂ ಕೋರ್ಟ್ ನ ಕಾರ್ಯವೈಖರಿಯಲ್ಲಿ ಬದಲಾವಣೆಗಳಾಗಿದ್ದು ಹೆಚ್ಚು ಪಾರದರ್ಶಕವಾಗಿದೆ ಎಂದಿದ್ದಾರೆ.

ಯಾರೋ ಹೊರಗಿನವರು ಮುಖ್ಯ ನ್ಯಾಯಮೂರ್ತಿಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದು ಅನಿಸಿ ನಾವು ಅವರನ್ನು ಭೇಟಿ ಮಾಡಿ ಕೇಳಿದೆವು. ಸುಪ್ರೀಂ ಕೋರ್ಟ್ ನ ಘನತೆ, ಗಾಂಭೀರ್ಯತೆ, ಸ್ವತಂತ್ರ ಕಾರ್ಯವೈಖರಿಯನ್ನು ಕಾಪಾಡಿ ಎಂದು ನಾವು ಪತ್ರ ಬರೆದಿದ್ದೆವು. ನಮ್ಮೆಲ್ಲಾ ಪ್ರಯತ್ನಗಳು ವಿಫಲವಾದಾಗ ಸುದ್ದಿಗೋಷ್ಠಿ ನಡೆಸಲು ತೀರ್ಮಾನಿಸಿದೆವು ಎಂದು ಕುರಿಯನ್ ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸುವಂತೆ ಆಲೋಚನೆ ನೀಡಿದ್ದು ನ್ಯಾಯಮೂರ್ತಿಗಳಾದ ಚೆಲಮೇಶ್ವರ, ಅದಕ್ಕೆ ಉಳಿದ ನ್ಯಾಯಾಧೀಶರು ಒಪ್ಪಿಗೆ ಸೂಚಿಸಿದರು ಎಂದ ಜಸ್ಟೀಸ್ ಕುರಿಯನ್, ವಿವಿಧ ನ್ಯಾಯಪೀಠಗಳಿಗೆ ಕೇಸುಗಳ ವಿಚಾರಣೆಯನ್ನು ವರ್ಗಾಯಿಸುವಾಗ ರಾಜಕೀಯವಾಗಿ ಪ್ರಭಾವವನ್ನು ಹೊಂದಿರುವ ನ್ಯಾಯಾಧೀಶರನ್ನು ದೀಪಕ್ ಮಿಶ್ರಾ ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದರು ಎಂದಿದ್ದಾರೆ.

ಈ ರೀತಿ ಭಿನ್ನಾಭಿಪ್ರಾಯ ಮತ್ತು ವಿರೋಧವಿದ್ದಾಗ ಸಂಪೂರ್ಣ ನ್ಯಾಯಾಲಯ ಸಭೆ ಕರೆದು ಅಲ್ಲಿ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳದೆ ಸುದ್ದಿಗೋಷ್ಠಿ ಏಕೆ ನಡೆಸಿದಿರಿ ಎಂದು ಕೇಳಿದ್ದಕ್ಕೆ,ಯಾವ ನ್ಯಾಯಾಧೀಶರು ಕೂಡ ತಮ್ಮಷ್ಟಕ್ಕೇ ಸಂಪೂರ್ಣ ನ್ಯಾಯಾಲಯ ಸಭೆ ಕರೆಯಲು ಸಾಧ್ಯವಿಲ್ಲ. ಆ ಅಧಿಕಾರವಿರುವುದು ಮುಖ್ಯ ನ್ಯಾಯಮೂರ್ತಿಗಳಿಗೆ ಮಾತ್ರ. ನ್ಯಾಯಾಧೀಶರಿಗೂ ಸಭೆ ನಡೆಸುವ ಅಧಿಕಾರ ನೀಡುವ ಬಗ್ಗೆ ಹಲವು ಮನವಿಗಳನ್ನು ಕೂಡ ಹಿಂದೆ ಮಾಡಲಾಗಿದೆ ಎಂದರು.

ತಮ್ಮ ಸೇವೆಯ ನಿವೃತ್ತಿ ಹೊತ್ತಿನಲ್ಲಿ ತಾಯಿ ಮತ್ತು ಮೂವರು ಪುತ್ರಿಯರ ನಡುವೆ ಉದ್ಯಮಕ್ಕೆ ಸಂಬಂಧಪಟ್ಟಂತೆ ಇದ್ದ ಕಲಹವನ್ನು ಬಗೆಹರಿಸಿದ ಸಂತೋಷ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರಿಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ