ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ಸೋಮವಾರ ಗೋಹತ್ಯೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಗಲಭೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಹಾಗೂ ಓರ್ವ ಯುವಕ ಮೃತಪಟ್ಟಿದ್ದಾರೆ.
ಇಂದು ಬುಲಂದ್ ಶಹರ್ ನಲ್ಲಿ ನಡೆದ ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾವ್ ಗ್ರಾಮದಲ್ಲಿ ಗೋಹತ್ಯೆ ನಡೆದಿದೆ ಎಂದು ಆರೋಪಿಸಿ ಸ್ಥಳೀಯರ ಗುಂಪೊಂದು ಪ್ರತಿಭಟನೆ ನಡೆಸುತ್ತಿತ್ತು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸ್ ಠಾಣೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಲಭೆ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಮೀರತ್ ವಲಯ ಎಡಿಜಿಪಿ ಪ್ರಶಾಂತ್ ಕುಮಾರ್ ಅವರು ಹೇಳಿದ್ದಾರೆ.
ಗಲಭೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹಾಗೂ 20 ವರ್ಷದ ಯುವಕ ಸುಮಿತ್ ಎಂಬುವವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುತ್ತಮುತ್ತಲ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮೀರತ್ ಎಡಿಜಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಭದ್ರತೆಗಾಗಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಔರಂಗಾಬಾದ್-ಜಹಂಗಿರಾಬಾದ್ ನಡುವಿನ ಮಾರ್ಗದಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಹಾಪುರದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos