ಕೋಲ್ಕತಾ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಉದ್ದೇಶಿತ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿದೆ ಎಂದು ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಅವರು ಗುರುವಾರ ಕೋಲ್ಕತಾ ಹೈಕೋರ್ಟ್ ಗೆ ತಿಳಿಸಿದ್ದಾರೆ.
ಕೋಮುಗಲಭೆ ಭೀತಿ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭವಾಗಬೇಕಿದ್ದ ಬಿಜೆಪಿ ಅಧ್ಯಕ್ಷರ ರಥಯಾತ್ರೆಗೆ ಅನುಮತಿ ನೀಡಲು ಕೂಚ್ ಬೆಹರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರಾಕರಿಸಿದ್ದಾರೆ ಎಂದು ಅಡ್ವೋಕೇಟ್ ಜನರಲ್ ಕಿಶೋರ್ ದತ್ತಾ ಅವರು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ರಥ ಯಾತ್ರೆಯಿಂದ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ದತ್ತಾ ಸಮರ್ಥಿಸಿಕೊಂಡಿರು. ಆದರೆ ಇದಕ್ಕೆ ಬಿಜೆಪಿ ಪರ ವಕೀಲರು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಾಧೀಶರು, ಅಹಿತಕರ ಘಟನೆ ನಡೆದರೆ ಯಾರು ಜಾವಾಬ್ದಾರರು ಎಂದು ಬಿಜೆಪಿ ಪರ ವಕೀಲ ಅನಿದ್ಯಾ ಮಿತ್ರಾ ಅವರಿಗೆ ಪ್ರಶ್ನಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಮಿತ್ರ ಉತ್ತರಿಸಿದರು.