ನವದೆಹಲಿ: ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಮೋದಿ ಸರ್ಕಾರ ತನ್ನ ದುರ್ಬಲ ಆರ್ಥಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಆರೋಪಿಸಿದೆ.
ಕೇಂದ್ರ ಸರ್ಕಾರದೊಂದಿಗೆ ದೀರ್ಘಕಾಲ ಕೆಲಸ ಮಾಡಲು ಸಾಧ್ಯವಾಗದೇ ಆರ್ಬಿಐ ಗವರ್ನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ಅವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನಮ್ಮ ಸಂಸ್ಥೆಗಳಾದ ಸಿಬಿಐ, ಆರ್ಬಿಐ, ಇ.ಡಿ. ಮತ್ತು ಸಂವಿಧಾನದ ಮೇಲೆ ಬಿಜೆಪಿ ನಡೆಸುತ್ತಿರುವ ಹಲ್ಲೆಯನ್ನು ನಾವು ತಡೆಯಬೇಕೆಂಬ ಒಮ್ಮತಕ್ಕೆ ಬರಬೇಕಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಮೋದಿ ಸರ್ಕಾರ ಆರ್ಬಿಐ ಗವರ್ನರ್ ಬಲವಂತವಾಗಿ ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಲಾದ ವಿಧಾನವು ಭಾರತದ ಹಣಕಾಸು ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಒಂದು ಕಳಂಕವಾಗಿ ಉಳಿಯಲಿದೆ. ಬಿಜೆಪಿ ಸರ್ಕಾರವು ತನ್ನ ದುರ್ಬಲ ಆರ್ಥಿಕ ತುರ್ತು ಪರಿಸ್ಥಿತಿಯನ್ನು ಪ್ರಕಟಿಸಿದ್ದು, ಈ ಮೂಲಕ ದೇಶದ ಗೌರವ ಹಾಗೂ ವಿಶ್ವಾಸಾರ್ಹತೆಯನ್ನು ಪಣಕ್ಕೆ ಒಡ್ಡಿದೆ ಎಂದು ಕಾಂಗ್ರೆಸ್ ಮುಖಂಡ ಅಹಮದ್ ಪಟೇಲ್ ಆರೋಪಿಸಿದ್ದಾರೆ.
ಇನ್ನು ದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಆರಂಭವಾಗಿದ್ದು, ಆರ್ಥಿಕ ಸ್ಥಿರತೆಗಾಗಿ ನಾವು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡುತ್ತೇವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.
ಆರ್ ಬಿಐ ಗವರ್ನರ್ ರಾಜೀನಾಮೆ ನೀಡಿರುವುದು ಅತ್ಯಂತ ಕಳವಳಕಾರಿ ವಿಷಯ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos