ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಜನವರಿ 11 ಮತ್ತು 12ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ ತೀರ್ಮಾನಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಈ ಕುರಿತಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭುಪೇಂದ್ರ ಯಾದವ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಜ.11 ಮತ್ತು 12 ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ರಾಜಧಾನಿ ನವದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ಗುರುವಾರವಷ್ಟೇ ಪಕ್ಷದ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಜ.11 ಮತ್ತು 12 ರಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ರಾಜಸ್ಥಾನ, ಛತ್ತೀಸ್ಗಢ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮಿಜೋರಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರದರ್ಶನ ಕುರಿತು ಯಾವುದೇ ರೀತಿಯ ಚರ್ಚೆಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ.
ಭಾರತೀಯ ಜನತಾ ಯುವ ಮೋರ್ಚಾ ಸಂಘಟನೆಯ ಯುವಕರು ರಾಷ್ಟ್ರ, ರಾಜ್ಯ ಹಾಗೂ ಎಲ್ಲಾ ಜಿಲ್ಲಾ ಬಿಜೆಪಿ ಕಚೇರಿಗಳಲ್ಲಿ ಡಿ.15 ಮತ್ತು 16 ರಂದು ಕಾರ್ಯಾಗಾರ ನಡೆಸಲಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾ ಸಂಘಟನೆ ಡಿ.21 ಮತ್ತು 22 ರಂದು ರಾಷ್ಟ್ರೀಯ ಅಧಿವೇಶನವನ್ನು ನಡೆಸಲಿದೆ. ಈ ಅಧಿವೇಶನದಲ್ಲಿ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಬಿಜೆಪಿ ಮಹಿಳಾ ಕಾರ್ಯಕರ್ತರೂ ಭಾಗವಹಿಸಲಿದ್ದಾರೆ. ಡಿ.22 ರಂದು ಅದಾಲಜ್ ನಲ್ಲಿ ಪ್ರಧಾನಿ ಮೋದಿಯವರು ಜನತೆಯನ್ನುದ್ದೇಶಿ ಮಾತನಾಡಲಿದ್ದಾರೆಂದಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos