ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡುತ್ತಿದ್ದಂತೆಯೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಶುಕ್ರವಾರ ವಾಕ್ಸಮರ ಆರಂಭಗೊಂಡಿದೆ.
ಒಂದೆಡೆ ಸುಳ್ಳು ಆರೋಪ ಮಾಡಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಆಗ್ರಹಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್, ಒಪ್ಪಂದ ಕುರಿತು ಜಂಟಿ ಸಂಸದೀಯ ತನಿಖೆ ನಡೆಬೇಕೆಂದು ಪಟ್ಟು ಹಿಡಿದಿದೆ.
ಸುಪ್ರೀಂಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಶಹನ್ವಾಜ್ ಹುಸೇನ್ ಅವರು, ಎಲ್ಲಾ ಒಪ್ಪಂದಗಳೂ ಬೋಫೋರ್ಸ್ ಹಗರಣಗಳಾಗಿರುವುದಿಲ್ಲ. ದೇಶದ ಭದ್ರತೆಗೆ ಧಕ್ಕೆಯುಂಟು ಮಾಡುವ ಒಪ್ಪಂದಗಳನ್ನು ಮಾಡಿಕೊಳ್ಳುವುದು ಕಾಂಗ್ರೆಸ್ ಹಾಗೂ ಅದರ ನಾಯಕತ್ವದ ಸಂಸ್ಕೃತಿ ಹಾಗೂ ಸಂಪ್ರದಾಯವಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಶ್ವಾಸಾರ್ಹತೆ ಪ್ರಶ್ನಿಸಿ, ಸುಳ್ಳು ಆರೋಪಗಳನ್ನು ಮಾಡಿದ್ದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕೂಡಲೇ ಕ್ಷಮೆಯಾಚಿಸಬೇಕೆಂದು ಹೇಳಿದ್ದಾರೆ.
ಇದರಂತೆ ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೇವಾಲಾ ಅವರು ಮಾತನಾಡಿ, ರಫೇಲ್ ಒಪ್ಪಂದ ಕುರಿತು ಸುಪ್ರೀಂಕೋರ್ಟ್ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ಈ ಹಿಂದೆಯೇ ಕಾಂಗ್ರೆಸ್ ಹೇಳಿತ್ತು. ರಕ್ಷಣಾ ಇಲಾಖೆಯಲ್ಲಿ ನಡೆಸಿರುವ ಭ್ರಷ್ಟಾಚಾರ ಜಂಟಿ ಸಂಸದೀಯ ಸಮಿತಿ ತನಿಖೆಯಿಂದಷ್ಟ ಹೊರಬರಲಿದೆಂ ಎಂದು ಹೇಳಿದ್ದೆವು.
ರಕ್ಷಣಾ ಒಪ್ಪಂದ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಇದನ್ನು ನಿರ್ಧರಿಸಲು ಸುಪ್ರೀಂಕೋರ್ಟ್ ಸೂಕ್ತ ವೇದಿಕೆಯಲ್ಲ. ಸುಪ್ರೀಂಕೋರ್ಟ್ ಆದೇಶವನ್ನು ಸಮಂಜಸವಾದುದಲ್ಲ ಎಂದು ತಿಳಿಸಿದ್ದಾರೆ.
ಮುಚ್ಚಿಡಲು ಏನೂ ಇಲ್ಲ ಎಂಬುದೇ ಆದರೆ, ಮೋದಿ ಸರ್ಕಾರ ಜಂಟಿ ಸಂಸದೀಯ ಸಮಿತಿ ತನಿಖೆ ಪ್ರಕರಣವನ್ನು ವಹಿಸಲಿ ಎಂದು ಸವಾಲು ಹಾಕುತ್ತೇನೆ ಎಂದಿದ್ದಾರೆ.
ಇದರಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, ನಾವು ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸಿದ್ದೆವು. ಈಗಲೂ ಆ ಮಾತಿಗೆ ಬದ್ಧರಾಗಿದ್ದೇವೆ. ಸುಪ್ರೀಂಕೋರ್ಟ್ ಆದೇಶದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಪಿಐಎಲ್ ಕುರಿತಂತೆ ನ್ಯಾಯಾಲಯ ನೀಡಿದ್ದ ತೀರ್ಪಿನ ಕುರಿತು ಗೃಹ ಸಚಿವರ ಅಸಮರ್ಪಕವಾಗಿ ಮಾತನಾಡುತ್ತಿದ್ದಾರೆಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos