ನವದೆಹಲಿ: ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಬಹುಕೋಟಿ ವಿವಿಐಪಿ ಕ್ಯಾಪ್ಟರ್ ಹಗರಣದ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಕೋರ್ಟ್, ಡಿಸೆಂಬರ್ 22ಕ್ಕೆ ತೀರ್ಪು ಕಾಯ್ದಿರಿಸಿದೆ.
ಕಳೆದ 15 ದಿನಗಳಿಂದ ಸಿಬಿಐ ವಶದಲ್ಲಿದ್ದ ಕ್ರಿಶ್ಚಿಯನ್ ಮೈಕೆಲ್ ಅವರನ್ನು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
12 ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ಪಿ ತ್ಯಾಗಿ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಒಪ್ಪಂದದಿಂದ ಸರ್ಕಾರದ ಖಜಾನೆಗೆ 2,666 ಕೋಟಿ ರೂ ನಷ್ಟವಾಗಿದೆ ಎಂದು ಆರೋಪಿಸಿದೆ.
ಈ ಒಪ್ಪಂದವು ಸಾಕಾರಗೊಳ್ಳಲು ನೆರವಾಗುವ ಕಾರ್ಯಕ್ಕೆ ಅಗಸ್ಟವೆಸ್ಟ್ಲ್ಯಾಂಡ್ ಸಂಸ್ಥೆಯಿಂದ ಕ್ರಿಶ್ಚಿಯನ್ ಮೈಕೆಲ್ ಸುಮಾರು 225 ಕೋಟಿ ರು. ಲಂಚ ಪಡೆದ ಆರೋಪ ಎದುರಿಸುತ್ತಿದ್ದಾರೆ.