ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಹಾಗೂ ಕೆನಡಾ ಪ್ರಧಾನಿ ಟ್ರುಡೋ
ನವದೆಹಲಿ: ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರನ್ನು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಶುಕ್ರವಾರ ಭೇಟಿ ಮಾಡಿದ್ದಾರೆ.
ಕಳೆದ ಐದು ದಿನಗಳಿಂದ ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರನ್ನು ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದು, ಆ ಮೂಲಕ ಈ ಬಗ್ಗೆ ಎದ್ದಿದ್ದ ವಿವಾದಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಇನ್ನು ಇಂದು ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಕೆನಡಾ ಪ್ರಧಾನಿ ಟ್ರುಡೋ ಅವರಿಗೆ ಬಾರತೀಯ ಸೇನೆಯ ಸೈನಿಕರು ಗೌರವ ವಂದನೆ ಆರ್ಪಣೆ ಮಾಡಿದರು.
ಸೈನಿಕರಿಂದ ಗೌರವ ವಂದನೆ ಸ್ವೀಕರಿಸಿದ ಕೆನಡಾ ಪ್ರಧಾನಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಇದಕ್ಕೂ ಮೊದಲು ಕೆನಡಾ ಪ್ರಧಾನಿ ಟ್ರುಡೋ ಅವರ ಭೇಟಿ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ಮತ್ತು ಕೆನಡಾ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸುವ ಕುರಿತು ತಾವು ಉತ್ಸುಕರಾಗಿದ್ದೇವೆ. ಭಾರತ ಕುರಿತಂತೆ ಟ್ರುಡೋ ಅವರ ಸ್ನೇಹ ಮತ್ತು ಬದ್ಧತೆ ಪ್ರಶಂಸನಾರ್ಹವಾದದ್ದು. ಟ್ರುಡೋ ಅವರ ಭಾರತ ಪ್ರವಾಸ ಸಂತೋಷ ತಂದಿದೆ ಎಂದು ಭಾವಿಸುತ್ತೇನೆ. ಅವರ ಮಕ್ಕಳ ಭೇಟಿ ಮಾಡಲು ನಾನು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇನ್ನು ಈ ಹಿಂದೆ ಯಾವುದೇ ದೇಶದ ಮುಖಂಡರು ಆಗಮಿಸಿದರೂ ಪ್ರಧಾನಿ ಮೋದಿ ಶಿಷ್ಟಾಚಾರ ಬದಿಗಿರಿಸಿ ಖುದ್ಧು ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಸ್ವಾಗತಿಸುತ್ತಿದ್ದರು. ಆದರೆ ಟ್ರುಡೋ ಭಾರತಕ್ಕೆ ಆಗಮಿಸಿದ್ದಾಗ ಮೋದಿ ತಮ್ಮ ಬದಲಿಗೆ ಅಧಿಕಾರಿಗಳ ತಂಡವನ್ನು ಕಳುಹಿಸಿಕೊಡುವ ಮೂಲಕ ಅವಮಾನಿಸಿದ್ದಾರೆ ಎಂದು ವಿಪಕ್ಷಗಳು ಕಿಡಿಕಾರಿದ್ದವು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos