ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮನತುಲ್ಲಾ ಖಾನ್ ಅವರಿಗೆ ಯಾವುದೇ ಬೆದರಿಕೆ ಇಲ್ಲ. ಅವರ ಆರೋಪ ಆಧಾರ ರಹಿತ ಎಂದು ಮಂಡೊಲಿ ಜೈಲ್ ಅಧಿಕಾರಿಗಳು ಬುಧವಾರ ದೆಹಲಿ ಕೋರ್ಟ್ ಗೆ ತಿಳಿಸಿದ್ದಾರೆ.
ನ್ಯಾಯಾಂಗ ಬಂಧನದಲ್ಲಿರುವ ಅಮನತುಲ್ಲಾ ಖಾನ್ ಸದ್ಯ ದೆಹಲಿಯ ಮಂಡೊಲಿ ಜೈಲಿನಲ್ಲಿದ್ದು, ತನಗೆ ಜೀವ ಬೆದರಿಕೆ ಇದೆ ಎಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ಜೈಲು ಅಧೀಕ್ಷಕರು ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಶೆಫಲಿ ಬರ್ನಾಲ್ ಟಂಡನ್ ಅವರಿಗೆ ವರದಿ ಸಲ್ಲಿಸಿದ್ದು, ಆಪ್ ಶಾಸಕನಿಗೆ ಯಾವುದೇ ಜೀವ ಬೆದರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜೈಲಿನಲ್ಲಿ ಸಹ ಕೈದಿಗಳು ತನ್ನ ಗಂಡನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ. ಜೈಲಿನಲ್ಲಿಯೇ ತನ್ನ ಪತಿಯನ್ನು ಹತ್ಯೆ ಮಾಡುವ ಸಾಧ್ಯತೆ ಇದೆ ಎಂದು ಅಮನತುಲ್ಲಾ ಖಾನ್ ಪತ್ನಿ ತಮ್ಮ ವಕೀಲರ ಮೂಲಕ ಕೋರ್ಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಆಪ್ ಶಾಸಕನ ಆರೋಪದ ಬಗ್ಗೆ ಫೆ.28ರೊಳಗೆ ವರದಿ ಸಲ್ಲಿಸುವಂತೆ ಜೈಲು ಅಧೀಕ್ಷಕರಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಇಂದು ವರದಿ ಸಲ್ಲಿಸಿದ್ದಾರೆ.