ಬಾರಬಂಕಿ: ಉತ್ತರ ಪ್ರದೇಶದ ಬಾರಬಂಕಿ ಜಿಲ್ಲೆಯಲ್ಲಿ ನಕಲ ಮದ್ಯ ಸೇವಿಸಿ 24 ಗಂಟೆಗಳಲ್ಲಿ 11 ಮಂದಿ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ವರದಿಯಾಗಿದೆ.
ಬಾರಬಂಕಿ ಜಿಲ್ಲೆಯ ದೇವಾ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಕಲಿ ಮದ್ಯ ಸೇವಿಸಿ ಒಟ್ಟು 11 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಸಿಂಗ್ ಅವರು ಪಿಟಿಐಗೆ ಫೋನ್ ಮೂಲಕ ತಿಳಿಸಿದ್ದಾರೆ.
11 ಜನ ದಾರುಣ ಸಾವಿನ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ನಕಲಿ ಮದ್ಯ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮತ್ತು ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳ ಜಂಟಿ ತನಿಖೆಗೆ ಆದೇಶಿಸಿದ್ದಾರೆ.