ನವದೆಹಲಿ: ಮಾಜಿ ಪ್ರಧಾನಿ, ಮಾಜಿ ರಾಷ್ಟ್ರಪತಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಸರ್ಕಾರಿ ನಿವಾಸ ನೀಡುವ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಮಾಜಿ ಮುಖ್ಯಮಂತ್ರಿಗಳು ಸರ್ಕಾರಿ ಬಂಗಲೆಯಲ್ಲೇ ಮುಂದುವರೆಯಲು ಅವಕಾಶ ಕಲ್ಪಿಸುವುದಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲು ಮುಂದಾಗಿರುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಈ ಕುರಿತು ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳು ಮುಕ್ತವಾಗಿ ತಮ್ಮ ಅಭಿಪ್ರಾಯ ತಿಳಿಸಬೇಕು ಎಂದಿದೆ.
ಮಾಜಿ ಪ್ರಧಾನಿ, ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳಿಗೆ ಸರ್ಕಾರ ಬಂಗಲೆ ನೀಡುವ ಕುರಿತು ಹಿರಿಯ ವಕೀಲ ಗೋಪಾಲ್ ಸುಬ್ರಮಣ್ಯಂ ಅವರು ನೀಡಿದ ಸಲಹೆಗಳನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ರಂಜನ್ ಗೊಗೊಯಿ ಮತ್ತು ಆರ್ ಬಾನುಮತಿ ಅವರನ್ನೊಳಗೊಂಡ ಸುಪ್ರೀಂ ಪೀಠ, ಈ ವಿಚಾರವನ್ನು ಕೇಂದ್ರ ಸರ್ಕಾರದ ಮತ್ತು ರಾಜ್ಯ ಸರ್ಕಾರಗಳ ಕಾನೂನು ಅಧಿಕಾರಿಗಲಿಗೆ ಬಿಡುವುದಾಗಿ ಹೇಳಿ ವಿಚಾರಣೆಯನ್ನು ಮಾರ್ಚ್ 13ಕ್ಕೆ ಮುಂದೂಡಿದೆ.
ಉತ್ತರ ಪ್ರದೇಶದ ರೀತಿ ಕಾಯ್ದೆ ತರಲು ಮುಂದಾಗಿರುವ ಇತರೆ ರಾಜ್ಯಗಳ ಅಡ್ವೋಕೇಟ್ ಜನರಲ್ ಳೊಂದಿಗೆ ಮತ್ತು ಭಾರತದ ಅಟಾರ್ನಿ ಜನರಲ್ ಅವರೊಂದಿಗೆ ಚರ್ಚಿಸುವಂತೆ ವಕೀಲ ಗೋಪಾಲ್ ಸುಬ್ರಮಣ್ಯಂ ಅವರಿಗೆ ಕೋರ್ಟ್ ಸಲಹೆ ನೀಡಿದೆ.