ನವದೆಹಲಿ: ಕೇಂದ್ರ ಸರ್ಕಾರ ನಾಳೆ ನಡೆಯಲಿರುವ 69ನೇ ಗಣರಾಜ್ಯೋತ್ಸವ ಪರೇಡ್ ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಿದ್ದು, ನಾಲ್ಕನೇ ಸಾಲಿನಲ್ಲಿ ಅವರಿಗೆ ಸ್ಥಾನ ಕಲ್ಪಿಸಲಾಗಿದೆ ಎಂದು ಗುರುವಾರ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಆದರೆ ರಾಜಕೀಯ ನಾಯಕರಿಗೆ ಮತ್ತು ಕೇಂದ್ರ ಸಚಿವರಿಗೆ ಯಾವ ಸಾಲಿನಲ್ಲಿ ಸ್ಥಾನ ಕಲ್ಪಿಸಲಾಗಿದೆ ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.
ಗಣರಾಜ್ಯೋತ್ಸವ ಪರೇಡ್ ವೇಳೆ ಪ್ರತಿ ವರ್ಷ ಕಾಂಗ್ರೆಸ್ ಅಧ್ಯಕ್ಷರಿಗೆ ಮೊದಲ ಸಾಲಿನಲ್ಲಿ ಸ್ಥಾನ ಕಲ್ಪಿಸಲಾಗುತ್ತಿತ್ತು. ಆದರೆ ಈ ಬಾರಿ ರಾಹುಲ್ ಗಾಂಧಿ ಅವರಿಗೆ ನಾಲ್ಕನೆ ಸಾಲಿನಲ್ಲಿ ಸ್ಥಾನ ಕಲ್ಪಿಸಲಾಗಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ಹಿಂದಿನ ಸಾಲಿನಲ್ಲಿ ಸ್ಥಾನ ನೀಡುವ ಮೂಲಕ ನರೇಂದ್ರ ಮೋದಿ ಸರ್ಕಾರ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ಯಾವ ಸಾಲಿನಲ್ಲಿ ಸ್ಥಾನ ನೀಡಿದರೂ ಅವರು ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸುತ್ತಾರೆ ಎಂದು ಸಹ ಅವರು ತಿಳಿಸಿದ್ದಾರೆ.
ಈ ಬಾರಿ ಗಣರಾಜ್ಯೋತ್ಸವದಲ್ಲಿ 10 ಆಸಿಯಾನ್ ರಾಷ್ಟ್ರಗಳ ಮುಖ್ಯಸ್ಥರು ಭಾರತದ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ.