ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಉತ್ತರ ಪ್ರದೇಶ ಕೇಂದ್ರ ಶಿಯಾ ವಕ್ಫ್ ಮಂಡಳಿ(ಯುಪಿಎಸ್ ಸಿಡಬ್ಲ್ಯು ಬಿ) ಸುಪ್ರೀಂ ಕೋರ್ಟ್ ಗೆ ಹೇಳಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ.
ಅಲಹಾಬಾದ್ ಹೈಕೋರ್ಟ್ ತಮಗೆ ನೀಡಿರುವ ಭೂಮಿಯ ಮೂರನೇ ಒಂದರಷ್ಟು ಭೂಮಿಯನ್ನು ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ ನೀಡಲು ನಿರ್ಧರಿಸಿರುವುದಾಗಿ ಸುಪ್ರೀಂ ಕೋರ್ಟ್ ಗೆ ಶಿಯಾ ವಕ್ಫ್ ಮಂಡಳಿ ಸ್ಪಷ್ಟಪಡಿಸಿದೆ. ಶ್ರೇಷ್ಠ ರಾಷ್ಟ್ರದ ಒಗ್ಗಟ್ಟು, ಐಕ್ಯತೆ, ಶಾಂತಿ, ಸೌಹಾರ್ದತೆಗಾಗಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ನೀಡುತ್ತೇವೆ. ಅಯೋಧ್ಯೆ ರಾಮನ ಜನ್ಮಭೂಮಿಯಾಗಿದ್ದು, ಅಲ್ಲಿ ರಾಮ ಮಂದಿರ ಮಾತ್ರ ನಿರ್ಮಾಣವಾಗಬೇಕು, ಮಸೀದಿ ನಿರ್ಮಾಣವಾಗಲು ಸಾಧ್ಯವಿಲ್ಲ ಎಂದು ವಕ್ಫ್ ಮಂಡಳಿ ಪರ ವಕೀಲರು ಕೋರ್ಟ್ ಗೆ ಹೇಳಿದ್ದಾರೆ. ಅಷ್ಟೇ ಅಲ್ಲದೇ ರಾಮಮಂದಿರ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಲು ಇಚ್ಛಿಸುತ್ತೇವೆ ಎಂದು ಹೇಳಿದ್ದಾರೆ.
ಬಾಬ್ರಿ ಮಸೀದಿಗೆ ಸಂಬಂಧಿಸಿದಂತೆ ಶಿಯಾ ವಕ್ಫ್ ಮಂಡಳಿಗೆ ಮಾತ್ರ ನಿರ್ಧಾರ ಕೈಗೊಳ್ಳುವ ಅಧಿಕಾರವಿದ್ದು, ಸುನ್ನಿ ಅಥವಾ ದೇಶದ ಇನ್ನಿತರ ಯಾವುದೇ ಮುಸ್ಲಿಂ ಸಂಘಟನೆಗಳಿಗೆ ಅಧಿಕಾರವಿಲ್ಲ ಎಂದು ಹೇಳಿದೆ.