ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್
ನವದೆಹಲಿ: ಲೋಕಸಭೆಯಲ್ವಿ ನಮಗೆ ಬಹುಮತವಿದ್ದು, ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ಎದುರಿಸಲು ಸಿದ್ಧರಿದ್ದೇವೆಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು, ಲೋಕಸಭೆಯಲ್ಲಿ ನಮಗೆ ಬಹುಮತವಿದ್ದು, ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ಎದುರಿಸಲು ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಸಂಸತ್ತಿನಲ್ಲಿ ಎನ್'ಡಿಎ ಸರ್ಕಾರಕ್ಕೆ ಬಹುಮತವಿದೆ. ದೇಶದ ಜನತೆ ಎನ್'ಡಿಎ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. 21 ರಾಜ್ಯಗಳು ನಮಗೆ ಬೆಂಬಲ ನೀಡಿವೆ. ಹೀಗಾಗಿ ಅವಿಶ್ವಾಸ ನಿರ್ಣಯ ಮಂಡನೆ ಎದುರಿಸಲು ನಾವು ಸಿದ್ಧರಿದ್ದೇವೆಂದು ತಿಳಿಸಿದ್ದಾರೆ.
ಇಂದಿನಿಂದ ಆರಂಭವಾಗಿರುವ ಮುಂಗಾರು ಅಧಿವೇಶನದಲ್ಲಿ ಯಥಾಪ್ರಕಾರ ವಿರೋಧ ಪಕ್ಷಗಳು ಕೋಲಾಹಲ ಎಬ್ಬಿಸಿದ್ದು, ಮಕ್ಕಳ ಕಳ್ಳರೆಂದು ಅಮಾಯಕರನ್ನು ಬಡಿದು ಕೊಲ್ಲುತ್ತಿರುವುದು, ನಿರುದ್ಯೋಗ, ಮಹಿಳಾ ಸುರಕ್ಷತೆ, ಜಮ್ಮು-ಕಾಶ್ಮೀರ ಪರಿಸ್ಥಿತಿ, ಕದನ ವಿರಾಮ ಉಲ್ಲಂಘನೆ, ಬೆಲೆ ಏರಿಕೆ ಇತ್ಯಾದಿ ವಿಚಾರಗಳ ಕುರಿತಂತೆ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ಕಿಡಿಕಾರಿವೆ.
ಈ ನಡುವಲ್ಲೇ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದು, ವಿಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅಂಗೀಕರಿಸಿದ್ದಾರೆ. ಅಲ್ಲದೆ, ಅವಿಶ್ವಾಸ ನಿರ್ಣಯ ಮಂಡನೆ ಕುರಿತ ಚರ್ಚೆಗೆ ಶೀಘ್ರದಲ್ಲಿಯೇ ದಿನಾಂಕ ಹಾಗೂ ಸಮಯವನ್ನು ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.