ನವದೆಹಲಿ: ರಫೇಲ್ ಯುದ್ಧ ವಿಮಾನ ಒಪ್ಪಂದ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಹಕ್ಕು ಚ್ಯುತಿ ಮಂಡಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಸೋಮವಾರ ತಿಳಿದುಬಂದಿದೆ.
ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ದ ಕಾಂಗ್ರೆಸ್ ಹಾಗೂ ಆಂಧ್ರಪ್ರದೇಶದ ತೆಲುಗು ದೇಶಂ(ಟಿಡಿಪಿ) ಪಕ್ಷ ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು.
ಅವಿಶ್ವಾಸ ನಿರ್ಣಯ ಕುರಿತಂತೆ ಶುಕ್ರವಾರ ಸಂಸತ್ತಿನಲ್ಲಿ ಸುದೀರ್ಘ ಚರ್ಚೆಗಳು ನಡೆದಿದ್ದವು. ಚರ್ಚೆ ವೇಳೆ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ರಫೇಲ್ ಒಪ್ಪಂದ ಕುರಿತಂತೆ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು.
ರಫೇಲ್ ಒಪ್ಪಂದ ಕುರಿತಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ ಜನತೆಗೆ ಸುಳ್ಳು ಹೇಳುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚನೆಯಂತೆ ಸುಳ್ಳು ಹೇಳುತ್ತಿದ್ದಾರೆ. ಫ್ರಾನ್ಸ್ ಹಾಗೂ ಭಾರತದ ನಡುವೆ ಯಾವುದೇ ರೀತಿಯ ರಹಸ್ಯ ಒಪ್ಪಂದಗಳಾಗಿಲ್ಲ. ರಫೇಲ್ ಒಪ್ಪಂದ ಕುರಿತಂತೆ ಸ್ವತಃ ನಾನೇ ಫ್ರಾನ್ಸ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದು, ಮಾತುಕತೆ ವೇಳೆ ಫ್ರಾನ್ಸ್ ಅಧ್ಯಕ್ಷರೇ ಅಂತಹ ಯಾವುದೇ ರೀತಿಯ ರಹಸ್ಯ ಒಪ್ಪಂದಗಳಾಗಿಲ್ಲ ಎಂದು ಹೇಳಿದ್ದರು ಎಂದು ಆರೋಪಿಸಿದ್ದರು.
ಇದನ್ನು ತಿರಸ್ಕರಿಸಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದರು. ಉಭಯ ರಾಷ್ಟ್ರಗಳ ನಡುವೆ ರಹಸ್ಯ ಒಪ್ಪಂದಗಳಾಗಿರುವುದು ಸತ್ಯ ಎಂದು ಹೇಳಿದ್ದರು.
ಇದೀಗ ರಫೇಲ್ ಒಪ್ಪಂದ ಕುರಿತಂತೆ ಸಂಪೂರ್ಣ ಮಾಹಿತಿಗಳನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ನಿರ್ಧರಿಸಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ.