ನವದೆಹಲಿ: ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷದ ವಿರುದ್ಧ ಕೆಲ ರಾಜಕೀಯ ಪಕ್ಷಗಳು ಮಾವೋವಾದಿಗಳನ್ನು ಬಳಕೆ ಮಾಡಿಕೊಳ್ಳುತ್ತಿವೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಅರುಣ್ ಜೇಟ್ಲಿಯವರು ಶುಕ್ರವಾರ ಹೇಳಿದ್ದಾರೆ.
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಪೊಲೀಸರು ಕೆಲ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದು, ತನಿಖೆ ವೇಳೆ ಮಾವೋವಾದಿಗಳು ಪ್ರಧಾನಿ ಮೋದಿಗೆ ಹತ್ಯೆಗೆ ಸಂಚು ರೂಪಿಸಿದ್ದಾರೆಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿತ್ತು.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಜೇಟ್ಲಿಯವರು, ದೇಶದಲ್ಲಿ ಮಾವೋವಾದಿಗಳ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಇದು ದೇಶಕ್ಕೆ ಅಪಾಯಕಾರಿಯಾಗಿದೆ. ಈ ಬಗ್ಗೆ ರಾಜಕೀಯ ಪಕ್ಷಗಳು ಮನವರಿಕೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಸಂವಿಧಾನಾತ್ಮಕ ವ್ಯವಸ್ಥೆಯನ್ನು ಹಿಂಸಾತ್ಮಕವಾಗಿ ಉರುಳಿಸಲು ಮಾವೋವಾದಿಗಳು ಯತ್ನಿಸುತ್ತಿದ್ದಾರೆ. ತಾವು ಗ್ರಹಿಸಿದಂತಹ ವ್ಯವಸ್ಥೆಯಲ್ಲಿ ಮೂಲಭೂತ ಹಕ್ಕಿಗಳು, ಕಾನೂನು, ವಾಕ್ ಸ್ವಾತಂತ್ರ್ಯಕ್ಕೆ ಯಾವುದೇ ಜಾಗವಿರುವುದಿಲ್ಲ. ಇಂತಹ ಸಂಘಟನೆಗಳಿಗೆ ಬೆಂಬಲ ನೀಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.